೦೧

೦೦೦ ಸೂಚನೆ ಸಭೆಯೊಳೋಲಗದೊಳು ...{Loading}...

ಸೂಚನೆ : ಸಭೆಯೊಳೋಲಗದೊಳು ವಿರಿಂಚಿ
ಪ್ರಭವನನುಮತದಿಂದ ಧರಣೀ
ವಿಭು ಮಹಾಕ್ರತು ರಾಜಸೂಯವನೊಲಿದು ಕೈಕೊಂಡ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಖಾಂಡವವನದ ವಹ್ನಿ
ಜ್ವಾಲೆ ತೆಗೆದುದು ಕೂಡೆ ಹೊಗೆದುದು ಹೊದರ ಹೊಸಮೆಳೆಯ
ಮೇಲುಗಾಳಗದುಬ್ಬಿನಲಿ ಸಿರಿ
ಲೋಲ ಸಹಿತ¯ರ್ಜುನನು ವಿಕ್ರಮ
ದೇಳಿಗೆಯ ಪರಿತೋಷದಲಿ ತಿರುಗಿದನು ಪಟ್ಟಣಕೆ ॥1॥

೦೦೨ ದೂತರೈದಿದರಿವರ ಸೂರೆಯ ...{Loading}...

ದೂತರೈದಿದರಿವರ ಸೂರೆಯ
ಕೈತವಕಿಗರು ಕೃತಕ ವಾರ್ತಾ
ಭೀತಪುರಜನ ಮುಖದ ದುಗುಡದ ದಡ್ಡಿಗಳನುಗಿದು
ಬೀತುದಿಂದ್ರನ ಬಲುಹು ವಿಗಡನ
ವೀತಿಹೋತ್ರನ ವಿಲಗ ತಿದ್ದಿ ವಿ
ಧೂತರಿಪುಬಲ ಬಂದನಿದೆಯೆಂದರು ಮಹೀಪತಿಗೆ ॥2॥

೦೦೩ ಹೂತುದರಸನ ಹರುಷಲತೆ ...{Loading}...

ಹೂತುದರಸನ ಹರುಷಲತೆ ಪುರು
ಹೂತ ವಿಜಯದ ವಿಜಯ ವಾರ್ತಾ
ಶ್ರೋತ್ರ ಸುಖಸಂಪ್ರೀತಿ ನಯನ ಜಲಾಭಿಷೇಕದಲಿ
ಮಾತು ಹಿಂಚಿತು ಮುಂಚಿದುದು ನಯ
ನಾತಿಥಿವ್ರಜ ಮುಸುಕಿತಸುರ ವಿ
ಘಾತಿ ಪಾರ್ಥನನನಿಲಸುತ ನಕುಲಾದಿ ಬಾಂಧವರ ॥3॥

೦೦೪ ತಳಿತ ಗುಡಿಗಳು ...{Loading}...

ತಳಿತ ಗುಡಿಗಳು ಸಾಲ ಕಲಶದ
ನಿಳಯ ನಿಳಯದ ಬೀದಿ ಬೀದಿಯ
ತಳಿರದೋರಣದೋರಣವ ನವ ಮಕರತೋರಣದ
ತಳಿಗೆ ತಂಬುಲದಾರತಿಯ ಮಂ
ಗಳಿತ ರಭಸದೊಳಖಿಳ ರಾಜಾ
ವಳಿಗಳೊಸಗೆಯೊಳಿವರು ಹೊಕ್ಕರು ರಾಜಮಂದಿರವ ॥4॥

೦೦೫ ಹಿರಿಯರಙ್ಘ್ರಿದ್ವಯಕೆ ...{Loading}...

ಹಿರಿಯರಂಘ್ರಿದ್ವಯಕೆ ಮಣಿದರು
ಕಿರಿಯರುಚಿತ ಕ್ಷೇಮ ಕುಶಲದಿ
ಪರಿರಚಿತ ಪರಿರಂಭ ಮಧುರವಚೋವಿಳಾಸದಲಿ
ಅರಸನಿವರನು ಮನ್ನಿಸಿದನಾ
ದರಿಸಿತನ್ಯೋನ್ಯಾನುರಾಗ
ಸ್ಫುರಿತ ತೇಜೋಭಾವ ವಿಭ್ರಮ ಭೂಪತಿವ್ರಾತ ॥5॥

೦೦೬ ಅರಸ ಕೇಳೈ ...{Loading}...

ಅರಸ ಕೇಳೈ ಬಳಿಕ ಹರಿ ನಿಜ
ಪುರಕೆ ಬಿಜಯಂಗೆಯ್ವ ವಾರ್ತೆಯ
ನೊರೆದನವನೀಪತಿಗೆ ಭೀಮ ಧನಂಜಯಾದ್ಯರಿಗೆ
ಅರಸಿಯರಿಗಭಿಮನ್ಯು ಧರ್ಮಜ
ನರ ವೃಕೋದರಸೂನು ಮೊದಲಾ
ಗಿರೆ ಸಮಸ್ತಜನಂಗಳನು ಮನ್ನಿಸಿದನುಚಿತದಲಿ ॥6॥

೦೦೭ ವರಮುಹೂರ್ತದೊಳಮೃತ ಯೋಗೋ ...{Loading}...

ವರಮುಹೂರ್ತದೊಳಮೃತ ಯೋಗೋ
ತ್ಕರ ಶುಭಗ್ರಹ ದೃಷ್ಟಿಯಲಿ ಹಿಮ
ಕರ ಶುಭಾವಸ್ಥೆಯಲಿ ಕೇಂದ್ರಸ್ಥಾನ ಗುರುವಿನಲಿ
ಭರದ ಧರಣಿಸುರರಾಶೀರ್ವಚನ ವಿ
ಸ್ತರಣ ದಧಿ ದೂರ್ವಾಕ್ಷತೆಗಳು
ಬ್ಬರದ ವಾದ್ಯ ಗಡಾವಣೆಯಲಸುರಾರಿ ಹೊರವಂಟ ॥7॥

೦೦೮ ಕರಯುಗದ ಚಮ್ಮಟಿಕೆ ...{Loading}...

ಕರಯುಗದ ಚಮ್ಮಟಿಕೆ ವಾಘೆಯ
ಲರಸ ರಥವೇರಿದನು ಮುಕ್ತಾ
ಭರದ ಭಾರದ ಸತ್ತಿಗೆಯ ಪಲ್ಲವಿಸಿದನು ಭೀಮ
ಹರಿಯುಭಯ ಪಾಶ್ರ್ವದಲಿ ಸಿತ ಚಾ
ಮರವ ಚಿಮ್ಮಿದನರ್ಜುನನು ಬಂ
ಧುರದ ಹಡಪದ ಹೆಗಲಲೈದಿದರರ್ಜುನಾನುಜರು ॥8॥

೦೦೯ ಪೌರಜನ ಪುರಜನ ...{Loading}...

ಪೌರಜನ ಪುರಜನ ನೃಪಾಲಕು
ಮಾರ ಸಚಿವ ಪಸಾಯ್ತ ಭಟ ಪರಿ
ವಾರ ಧೌಮ್ಯಪ್ರಮುಖ ಸೂರಿ ಸಮಾಜರೊಗ್ಗಿನಲಿ
ತೇರ ಬಳಿವಿಡಿದೈದಿದರು ಮುರ
ವೈರಿ ವಿರಹ ವಿಧೂತ ವದನಾಂ
ಭೋರುಹರ ಸಂತೈಸಿ ಬೀಳ್ಕೊಟ್ಟನು ಕೃಪಾಜಲಧಿ ॥9॥

೦೧೦ ಅರಿನೃಪರು ಕುಹುಕಿಗಳು ...{Loading}...

ಅರಿನೃಪರು ಕುಹುಕಿಗಳು ನೀವೇ
ಸರಸ ಹೃದಯರಧರ್ಮಶೀಲರು
ಪರರು ನೀವತಿ ಧರ್ಮನಿಷ್ಠರು ಹಾನಿಯುಂಟದಕೆ
ಅರಸನಾರೋಗಣೆ ವಿಹಾರದೊ
ಳಿರುಳು ಹಗಲು ಮೃಗವ್ಯಸನದೆ
ಚ್ಚರಿನೊಳಿಹುದೆಂದನಿಬರನು ಬೀಳ್ಕೊಟ್ಟನಸುರಾರಿ ॥10॥

೦೧೧ ನಾಲಗೆಗಳಸುರಾರಿ ಗುಣ ...{Loading}...

ನಾಲಗೆಗಳಸುರಾರಿ ಗುಣ ನಾ
ಮಾಳಿಯಲಿ ತುರುಗಿದವು ಕಂಗಳು
ನೀಲಮೇಘಶ್ಯಾಮನಲಿ ಬೆಚ್ಚವು ವಿಹಾರದಲಿ
ಬಾಲಕೇಳೀಕಥನ ಸುಧೆಯೊಳ
ಗಾಳಿ ಮುಳುಗುತ ಕಳುಹುತನಿಬರು
ಸಾಲಭಂಜಿಕೆಯಂದವಾದರು ಕೃಷ್ಣವಿರಹದಲಿ ॥11॥

೦೧೨ ಕಳುಹಿ ಕಙ್ಗಳು ...{Loading}...

ಕಳುಹಿ ಕಂಗಳು ಮರಳಿದವು ಮನ
ಕಳುಹದಾ ದ್ವಾರಾವತಿಗೆ ಮಂ
ಗಳ ಮಹೋತ್ಸವದೊಸಗೆ ನುಡಿಯಲಿ ಹೊಕ್ಕನಸುರಾರಿ
ಬಳಿಕಿವರು ನಿಜ ರಾಜಭವನ
ಸ್ಥಳಕೆ ಬಂದರು ಸೌಮನಸ್ಯದ
ಲಿಳೆಯ ಪಾಲಿಸುತಿರ್ದರವನೀಪಾಲ ಕೇಳ್ ಎಂದ ॥12॥

೦೧೩ ಮುರಹರನ ನೇಮದಲಿ ...{Loading}...

ಮುರಹರನ ನೇಮದಲಿ ಮಯ ವಿ
ಸ್ತರಿಸಿದನು ಪದಿನಾಲ್ಕು ತಿಂಗಳು
ವರ ಸಭಾಮಂಟಪವನನಿಬರಿಗಿವ ಕೃತಜ್ಞನಲೆ
ಕಿರಣ ಲಹರಿಯ ವಿವಿಧ ರತ್ನೋ
ತ್ಕರದ ರಚನಾಶಿಲ್ಪವಿದು ದೇ
ವರಿಗಸಾಧ್ಯವು ಶಿವಶಿವಾಯೆನೆ ಮೆರೆದುದಾಸ್ಥಾನ ॥13॥

೦೧೪ ಹತ್ತು ಸಾವಿರ ...{Loading}...

ಹತ್ತು ಸಾವಿರ ಕೈ ಪ್ರಮಾಣದ
ಸುತ್ತುವಳಯದ ಮಣಿಯ ಶಿಲೆಗಳ
ತತ್ತವಣೆಗಳ ತೆಕ್ಕೆವೆಳಗಿನ ಲಳಿಯ ಲಹರಿಗಳ
ಸುತ್ತುವಳಯದ ಪದ್ಮರಾಗದ
ಭಿತ್ತಿಗಳ ವೈಡೂರ್ಯ ಶಿಲೆಗಳ
ಮತ್ತವಾರಣ ವರ ವಿಧಾನದಲೆಸೆದುದಾಸ್ಥಾನ ॥14॥

೦೧೫ ಕರೆಸಿದನು ಮಯನೆಣ್ಟು ...{Loading}...

ಕರೆಸಿದನು ಮಯನೆಂಟು ಸಾವಿರ
ಸರಿಗ ರಕ್ಕಸ ಕಿಂಕರರ ನಿಜ
ಶಿರದೊಳಾಂತರು ತಂದರಿಂದ್ರಪ್ರಸ್ಥಪುರವರಕೆ
ಅರಸ ಕಾಣಿಸಿಕೊಂಡನದನಾ
ದರಿಸಿದನು ಭೀಮಂಗೆ ಭಾರಿಯ
ವರ ಗದಾದಂಡವನು ಕಾಣಿಕೆಯಿತ್ತು ಪೊಡವಂಟ ॥15॥

೦೧೬ ಇದು ಪುರಾತನ ...{Loading}...

ಇದು ಪುರಾತನ ಸಗರ ವಂಶಾ
ಭ್ಯುದಯ ದುರ್ಜಯ ಯೌವನಾಶ್ವನ
ಗದೆ ಕೃತಾಂತನ ಕರದ ದಂಡವನಂಡಲೆವ ಬಲದ
ಮದದಲೊಪ್ಪುವುದೆನುತ ಮಯನತಿ
ಮುದದಿ ಬಳಿಕಾ ದೇವದತ್ತಾ
ಖ್ಯದ ಮಹಾ ಶಂಖವನು ಪಾರ್ಥಗೆ ಕೊಟ್ಟು ಕೈಮುಗಿದ ॥16॥

೦೧೭ ಒಸಗೆ ಮೆರೆದುದು ...{Loading}...

ಒಸಗೆ ಮೆರೆದುದು ಮಯನ ಮಿಗೆ ಮ
ನ್ನಿಸಿದನವನಿಪನಂಗಚಿತ್ತದೊ
ಳಸುರ ಕಿಂಕರರನಿಬರನು ಸನ್ಮಾನ ದಾನದಲಿ
ಒಸೆದು ಕಳುಹಿದನಾತನನು ದೆಸೆ
ದೆಸೆಯ ಯಾಚಕ ನಿಕರ ನೂಕಿತು
ಮುಸುಕಿತೈ ಧರ್ಮಜನ ಕೀರ್ತಿಯ ಝಾಡಿ ಮೂಜಗವ ॥17॥

೦೧೮ ದಿವಸ ದಿವಸದೊಳುಣ್ಡುದವನೀ ...{Loading}...

ದಿವಸ ದಿವಸದೊಳುಂಡುದವನೀ
ದಿವಿಜ ಸಂತತಿ ಹತ್ತು ಸಾವಿರ
ವವರನೇನೆಂದೆಣಿಸುವೆನು ಮಾರ್ಗಣ ಮಹೋದಧಿಯ
ವಿವಿಧ ರತ್ನಾಭರಣ ಕಾಂಚನ
ನವ ದುಕೂಲದ ದಿಂಡಿನಲಿ ಬುಧ
ನಿವಹ ದಣಿದುದನಂತ ಕೃಪಣಾನಾಥ ಜನಸಹಿತ ॥18॥

೦೧೯ ಆ ಮಹೋತ್ಸವವೇಳು ...{Loading}...

ಆ ಮಹೋತ್ಸವವೇಳು ದಿನವಭಿ
ರಾಮರಂಜಿತವಾಯ್ತು ಶುಭದಿನ
ರಾಮಣೀಯಕ ಲಗ್ನದಲಿ ಹೊಕ್ಕನು ಮಹಾಸಭೆಯ
ಭೂಮಿಪಾಲರನಂತ ಸುಜನ
ಸ್ತೋಮವನುಜರಮರ್ತ್ಯರೆನಿಪ ಸ
ನಾಮರಿದ್ದರು ರಾಯನೆಡಬಲವಂಕದಿದಿರಿನಲಿ ॥19॥

೦೨೦ ಹೊಳೆ ಹೊಳೆದುದಾಸ್ಥಾನ ...{Loading}...

ಹೊಳೆ ಹೊಳೆದುದಾಸ್ಥಾನ ಕಾಂತಾ
ವಳಿಯ ಕಂಗಳ ಬೆಳಕಿನಲಿ ತನಿ
ಮುಳುಗಿತೋಲಗ ಲಲಿತರಸ ಲಾವಣ್ಯಲಹರಿಯಲಿ
ವಿಲಸದಖಿಳಾಭರಣ ರತ್ನಾ
ವಳಿಯ ರಶ್ಮಿಯಲಡಿಗಡಿಗೆ ಪ್ರ
ಜ್ವಲಿಸಿತಾ ಸಭೆ ದೀಪ್ತಿಮಯ ವಿವಿಧಾನುಭಾವದಲಿ ॥20॥

೦೨೧ ಮೇಳದಲಿ ಗನ್ಧರ್ವರಿಪ್ಪ ...{Loading}...

ಮೇಳದಲಿ ಗಂಧರ್ವರಿಪ್ಪ
ತ್ತೇಳು ತುಂಬುರ ಸಹಿತ ಶುದ್ದದ
ಸಾಳಗದ ಸಂಕೀರ್ಣ ದೇಶಿಯ ವಿವಿಧ ರಚನೆಗಳ
ಬಾಳೆಯರ ಸುರಗಣಿಕೆಯರ ಮುಖ
ಚಾಳೆಯರ ಸಂಗೀತ ತಾಳದ
ತೂಳುವರೆ ತುಂಬಿದುದು ಕುಸುಮಾಯುಧನ ಕಳಕಳವ ॥21॥

೦೨೨ ಆ ಮಹಾಸಭೆಯಲಿ ...{Loading}...

ಆ ಮಹಾಸಭೆಯಲಿ ಯುಧಿóóಷ್ಠಿರ
ಭೂಮಿಪತಿ ದೂರದಲಿ ಕಂಡನು
ತಾಮರಸದಳ ನಯನ ಸಂನಿಭ ಭಾವ ಭಾವಿತನ
ಹಾ ಮಹಾದೇವೆತ್ತಣದುಭುತ
ಧಾಮವಿದು ದಿನಮಣಿಯ ತೇಜ
ಸ್ತೋಮವೆರಡರ ಧಾತುಯೆನುತೀಕ್ಷಿಸಿದರಾ ದೆಸೆಯ ॥22॥

೦೨೩ ಲಲಿತತೇಜಃಪುಞ್ಜ ಮಿಗೆ ...{Loading}...

ಲಲಿತತೇಜಃಪುಂಜ ಮಿಗೆ ಥಳ
ಥಳಿಸಿತತಿ ದೂರದಲಿ ಬೆಳಗಿನ
ಗೊಳಸನುಡಿದಂತಾದುದಾಗಳೆ ತೋರಿತಾಕಾರ
ತಳಿತುದವಯವ ಶುದ್ಧವರ್ಣ
ಸ್ಥಳವು ನಿಮಿಷಕೆ ಮುನಿವರಾಕೃತಿ
ಹೊಳೆದುದಾಕ್ಷಣವೀತ ನಾರದನೆಂದುದಖಿಳಜನ ॥23॥

೦೨೪ ದಣಿಯದಾತನ ಬೆರಳು ...{Loading}...

ದಣಿಯದಾತನ ಬೆರಳು ನಾರಾ
ಯಣ ರವದ ವೀಣೆಯಲಿ ಹೃದಯಾಂ
ಗಣದ ಸೀಮೆಗೆ ಬಿಡಯವಾಗದು ಕೃಷ್ಣಪದ ಕೇಳಿ
ಪ್ರಣವರೂಪದ ಭಾವಶುದ್ಧಿಯ
ಕಣಿ ಮುರಾರಿಯ ತನ್ಮಯದ ನಿ
ರ್ಗುಣ ಮುನೀಶ್ವರನಿಳಿದನಿಂದ್ರಪ್ರಸ್ಥಪುರವರಕೆ ॥24॥

೦೨೫ ಬನ್ದನರಮನೆಗಾ ಮುನಿಯನಭಿ ...{Loading}...

ಬಂದನರಮನೆಗಾ ಮುನಿಯನಭಿ
ವಂದಿಸಿದುದಾಸ್ಥಾನವಿದಿರಲಿ
ನಿಂದು ಬಿಜಯಂಗೈಸಿ ತಂದರು ಸಿಂಹವಿಷ್ಟರಕೆ
ಸಂದ ಮಧುಪರ್ಕಾದಿ ಸತ್ಕೃತಿ
ಯಿಂದ ಪೂಜಿಸಿ ವಿನಯ ಮಿಗೆ ನಗು
ತೆಂದನವನೀಪಾಲನುಚಿತೋಕ್ತಿಯಲಿ ನಾರದನ ॥25॥

೦೨೬ ಕುಶಲವೇ ನಿಮ್ಮಙ್ಘ್ರಿಗಳಿಗಿಂ ...{Loading}...

ಕುಶಲವೇ ನಿಮ್ಮಂಘ್ರಿಗಳಿಗಿಂ
ದೊಸಗೆಯಾಯಿತು ನಮಗೆ ದರುಶನ
ವಸಮಸಂಸೃತಿವಹ್ನಿದಗ್ಧರಿಗಮೃತವರ್ಷವಲೆ
ಪಶುಪತಿಯ ಪರಮೇಷ್ಠಿಯಾ ಮುರ
ದ್ವಿಷನ ಸಾಮಥ್ರ್ಯದ ಸಗಾಢದ
ಎಸಕ ನಿಮಗುಂಟೆಂದು ಕೊಂಡಾಡಿದನು ನಾರದನ ॥26॥

೦೨೭ ಕುಶಲವೆಮಗಿನ್ದೈದೆ ನೀನೀ ...{Loading}...

ಕುಶಲವೆಮಗಿಂದೈದೆ ನೀನೀ
ವಸುಮತೀವಧುಗೊಳ್ಳಿದನೆ ಶೋ
ಭಿಸುವುದೇ ಭವದಾಜ್ಞೆಯಲಿ ವರ್ಣಾಶ್ರಮಾಚಾರ
ದೆಸೆ ದೆಸೆಗಳಮಳಾಗ್ನಿ ಹೋತ್ರ
ಪ್ರಸರಧೂಮಧ್ವಜಗಳೇ ನಿಂ
ದಿಸರಲೇ ದುರ್ಜನರು ಸುಜನರನೆಂದನಾ ಮುನಿಪ ॥27॥

೦೨೮ ಅರ್ಥದಿನ್ ಧರ್ಮವನು ...{Loading}...

ಅರ್ಥದಿಂ ಧರ್ಮವನು ಧರ್ಮದಿ
ನರ್ಥವನು ಧರ್ಮಾರ್ಥವೆರಡನು
ವ್ಯರ್ಥಕಾಮದಲಳಿಯಲೇ ರಾಜ್ಯಾಭಿಲಾಷೆಯಲಿ
ಅರ್ಥಸಾಧನ ಧರ್ಮಸಾಧನ
ವರ್ಥ ಧರ್ಮದಲುಭಯ ಲೋಕಕ
ನರ್ಥಸಾಧನ ಕಾಮವೆಂದನು ಮುನಿ ನೃಪಾಲಂಗೆ ॥28॥

೦೨೯ ಮಾನ್ಯರನು ಧಿಕ್ಕರಿಸೆಯೆಲೆಯವ ...{Loading}...

ಮಾನ್ಯರನು ಧಿಕ್ಕರಿಸೆಯೆಲೆಯವ
ಮಾನ್ಯರನು ಮನ್ನಿಸೆಯಲೇ ಸಂ
ಮಾನ್ಯರನು ಸತ್ಕರಿಸುವಾ ಹಳಿವಾ ವಿಕಾರಿಗಳ
ಅನ್ಯರನು ನಿನ್ನವರ ಮಾಡಿಯ
ನನ್ಯರನು ಬಾಹಿರರ ಮಾಡಿವ
ದಾನ್ಯರನು ನಿಗ್ರಹಿಸೆಯೆಲೆ ಭೂಪಾಲ ಕೇಳ್ ಎಂದ ॥29॥

೦೩೦ ಖಳರ ಖಣ್ಡಿಸುವಾ ...{Loading}...

ಖಳರ ಖಂಡಿಸುವಾ ಮದ ವ್ಯಾ
ಕುಲರ ದಂಡಿಸುವಾ ದರಿದ್ರರ
ನೊಲಿದು ರಕ್ಷಿಸುವಾ ಸುಮಾಯಾವಿಗಳ ಶಿಕ್ಷಿಸುವ
ಕುಲಯುತರ ಕೊಂಡಾಡುವಾ ರಿಪು
ಬಲದ ತಲೆ ಚೆಂಡಾಡುವಾ ದು
ರ್ಬಲರನತಿ ಬಾಧಿಸೆಯಲೇ ಭೂಪಾಲ ಕೇಳ್ ಎಂದ ॥30॥

೦೩೧ ಜಾತಿ ಸಙ್ಕರವಿಲ್ಲಲೇ ...{Loading}...

ಜಾತಿ ಸಂಕರವಿಲ್ಲಲೇ ಜನ
ಜಾತದಲಿ ಹೀನೋತ್ತಮರು ನಿ
ರ್ಣೀತರೇ ನಿಜಮಾರ್ಗದಲಿ ಕುಲವಿಹಿತ ಧರ್ಮದಲಿ
ಖ್ಯಾತರೇ ಸತ್ಪುರುಷರಧಿಕ
ದ್ಯೂತ ಕೇಳಿಗಳಿಲ್ಲಲೇ ಮೃಗ
ಯಾತಿರೇಕವ್ಯಸನ ಕಿರಿದೇ ರಾಯ ನಿನಗೆಂದ ॥31॥

೦೩೨ ಗಸಣಿಯಿಲ್ಲಲೆ ನಿನಗೆ ...{Loading}...

ಗಸಣಿಯಿಲ್ಲಲೆ ನಿನಗೆ ಸಪ್ತ
ವ್ಯಸನದಲಿ ನಿನ್ನನುಜ ತನುಜರ
ಮುಸುಡಧರ್ಮದಲಿರದಲೇ ವೈದಿಕ ವಿಧಾನದಲಿ
ಸಸಿನವೇ ನಿನ್ನರಿತ ಖಳರಿಗೆ
ಹುಸಿಕರಿಗೆ ಡಂಬಕರಿಗಜ್ಞರಿ
ಗುಸುರುವಾ ನಿನ್ನಂತರಂಗವನೆಂದನಾ ಮುನಿಪ ॥32॥

೦೩೩ ಹುರುಡಿಗರನೇಕಾನ್ತದೊಳಗಾ ...{Loading}...

ಹುರುಡಿಗರನೇಕಾಂತದೊಳಗಾ
ದರಿಸುವರು ಭೇದಕರ ಬುದ್ಧಿಗೆ
ತೆರಹುಗೊಡುವರು ಕುಟಿಲರಿಗೆ ವಿಶ್ವಾಸ ಹೀನರಿಗೆ
ಮರುಳುಗೊಂಬರು ಖೂಳರಿಗೆ ಭಂ
ಡರಿಗೆ ತೆರುವರು ಧನವನೀ ಧರೆ
ಯರಸುಗಳಿಗಿದು ಸಹಜ ನಿನ್ನಂತಸ್ಥವೇನೆಂದ ॥33॥

೦೩೪ ಒಳಗೆ ಕುಜನರು ...{Loading}...

ಒಳಗೆ ಕುಜನರು ಹೊರಗೆ ಧರಣೀ
ವಳೆಯ ಮಾನ್ಯರು ಛತ್ರ ಚಮರದ
ನೆಳಲು ಖೂಳರಿಗಾತಪದ ಬಲುಬೇಗೆ ಬುಧಜನಕೆ
ಒಳಗೆ ರಾಜದ್ರೋಹಿಗಳು ಹೊರ
ವಳಯದಲಿ ಪತಿಕಾರ್ಯನಿಷ್ಠರು
ಬಳಸಿಹುದು ನೃಪಚರಿತ ನಿನ್ನಂತಸ್ಥವೇನೆಂದ ॥34॥

೦೩೫ ಖೂಳರೊಡನೆ ವಿನೋದ ...{Loading}...

ಖೂಳರೊಡನೆ ವಿನೋದ ಭಂಡರೊ
ಳಾಳಿ ಸ್ವಾಮಿದ್ರೋಹರೊಡನೆ ಸ
ಮೇಳ ನಂಬುಗೆ ಡಂಭರೊಡನೆ ವಿಕಾರಿಯೊಡನಾಟ
ಸೂಳೆಯರುಸಮಜೀವಿಗಳು ಕುಲ
ಬಾಲಕಿಯರೂಗಡಿಕೆಯವರು ನೃ
ಪಾಲ ಜನಕಿದು ಸಹಜ ನಿನ್ನಂತಸ್ಥವೇನೆಂದ ॥35॥

೦೩೬ ಆರು ಗುಣದೊಳುಪಾಯ ...{Loading}...

ಆರು ಗುಣದೊಳುಪಾಯ ನಾಲ್ಕರೊ
ಳೇರಿಹುದೆ ಮನ ರಾಜಧರ್ಮದ
ಮೂರು ವರ್ಗದೊಳೆಚ್ಚರುಂಟೇ ನಯವಿಧಾನದಲಿ
ಮೂರು ಶಕ್ತಿಗಳೊಳಗೆ ಮನ ಬೇ
ರೂರಿಹುದೆ ಸಪ್ತಾಂಗದಲಿ ಮೈ
ದೋರಿಹೈ ಬೇಸರೆಯೆಲೇ ಭೂಪಾಲ ನೀನೆಂದ ॥36॥

೦೩೭ ಪ್ರಜೆಗಳನುರಾಗಿಗಳೆ ಸುಭಟ ...{Loading}...

ಪ್ರಜೆಗಳನುರಾಗಿಗಳೆ ಸುಭಟ
ವ್ರಜಕೆ ಜೀವಿತ ಸಂದಿಹುದೆ ವರ
ಸುಜನರಿಗೆ ಸಂತೋಷವೇ ಮಧುರೋಕ್ತಿ ರಚನೆಯಲಿ
ವಿಜಯ ಭೀಮರು ಯಮಳರಿವರ
ಗ್ರಜರೊಳನುಜರಭಿನ್ನರೇ ಗಜ
ಬಜಿಕೆಯಂತಃಪುರದೊಳಿಲ್ಲಲೆ ರಾಯ ಕೇಳ್ ಎಂದ ॥37॥

೦೩೮ ವಿಹಿತ ಕಾಲದ ...{Loading}...

ವಿಹಿತ ಕಾಲದ ಮೇಲೆ ಸಂಧಿಯ
ನಹಿತರೊಳು ವಿರಚಿಸುವ ಮೇಣ್ವಿ
ಗ್ರಹದ ಕಾಲಕೆ ವಿಗಡಿಸುವುದೆಂಬರಸು ನೀತಿಯಲಿ
ವಿಹಿತವೇ ಮತಿ ವೈರಿ ರಾಯರ
ವಿಹರಣವನವರಾಳು ಕುದುರೆಯ
ಬಹಳತೆಯನಲ್ಪತೆಯನರಿವೈ ರಾಯ ನೀನೆಂದ ॥38॥

೦೩೯ ಒನ್ದರಾಯಕೆ ಬೀಯ ...{Loading}...

ಒಂದರಾಯಕೆ ಬೀಯ ಸರಿ ಮ
ತ್ತೊಂದು ಕಡೆಯಲಿ ಹೀನ ಫಲವಿ
ನ್ನೊಂದು ಕಾರ್ಯದುಪೇಕ್ಷತೆಗೆ ಮೊದಲಿಲ್ಲ ಕಡೆಯಿಲ್ಲ
ಒಂದು ದುರ್ಘಟ ದೈವ ಸಾಧಿತ
ವೊಂದು ಶಂಕಿತ ಫಲವೆನಿಪ್ಪವ
ಹಿಂದುಗಳೆವೈ ಮಂತ್ರದಲಿ ಭೂಪಾಲ ಕೇಳ್ ಎಂದ ॥39॥

೦೪೦ ನೆನೆದ ಮನ್ತ್ರವ ...{Loading}...

ನೆನೆದ ಮಂತ್ರವ ನಿನ್ನೊಳಾಲೋ
ಚನೆಯ ನಿಶ್ಚಯವಿಲ್ಲದಿರಲೊ
ಬ್ಬನಲಿ ಮೇಣ್ ಹಲಬರಲಿ ಜಡರಲಿ ಮತಿ ವಿಹೀನರಲಿ
ಮನ ಬರಡರಲಿ ಸಲೆ ವಿಧಾವಂ
ತನಲಿ ಮಂತ್ರಾಲೋಚನೆಯ ಸಂ
ಜನಿಸಿ ಹರಹಿನೊಳಳಿಯೆಲೇ ಭೂಪಾಲ ಕೇಳ್ ಎಂದ ॥40॥

೦೪೧ ಕಿರಿದುಪೇಕ್ಷೆಯ ಬಹಳ ...{Loading}...

ಕಿರಿದುಪೇಕ್ಷೆಯ ಬಹಳ ಫಲವನು
ಹೊರೆವುದಿದು ಮೇಣಲ್ಪ ಭೇದಕೆ
ಮುರಿವುದಿದು ವಿಕ್ರಮಕೆ ವಶವಿದು ನೀತಿಸಾಧ್ಯವಿದು
ಹರಿವುದಿದು ನಯ ಶಕ್ತಿಗೆಂಬುದ
ನರಿದು ನಡೆವೈ ರಾಜಧರ್ಮದ
ಹೊರಿಗೆಯನು ಮರೆದಿರೆಯೆಲೇ ಭೂಪಾಲ ಕೇಳ್ ಎಂದ ॥41॥

೦೪೨ ಪರರು ಮಾಡಿದ ...{Loading}...

ಪರರು ಮಾಡಿದ ಸದ್ಗುಣಂಗಳ
ಮರೆಯೆಯಲೆ ಪರರವಗುಣಂಗಳ
ಮರೆದು ಕಳೆವಾ ಮಾನ್ಯರಿಗೆ ನೀ ಮಾಡಿದವಗುಣವ
ಮೆರೆಯೆಯಲೆ ನೀ ಮಾಡಿದುಚಿತವ
ಮರೆದು ಕಳೆವಾಚಾರವಿದು ಸ
ತ್ಪುರುಷರಭಿಮತವಿದು ಕಣಾ ಭೂಪಾಲ ಕೇಳ್ ಎಂದ ॥42॥

೦೪೩ ಭಜಿಸುವಾ ಭಕ್ತಿಯಲಿ ...{Loading}...

ಭಜಿಸುವಾ ಭಕ್ತಿಯಲಿ ದೈವ
ದ್ವಿಜ ಗುರುಸ್ಥಾನವನು ದೇಶ
ಪ್ರಜೆಯನರ್ಥಾಗಮದ ಗಡಣೆಗೆ ಘಾಸಿ ಮಾಡೆಯೆಲೆ
ಕುಜನರಭಿಮತದುಗ್ರ ದಂಡ
ವ್ಯಜನದಲಿ ಜನ ಜಠರವಹ್ನಿಯ
ಸೃಜಿಸೆಯೆಲೆ ಭವದೀಯ ರಾಜ್ಯಸ್ಥಿತಿಯ ಹೇಳೆಂದ ॥43॥

೦೪೪ ಆಣೆಗಪಜಯವಿಲ್ಲಲೇ ಕೀ ...{Loading}...

ಆಣೆಗಪಜಯವಿಲ್ಲಲೇ ಕೀ
ಳಾಣಿ ಟಂಕದೊಳಿಲ್ಲಲೇ ನಿ
ತ್ರಾಣದಲಿ ಸಂಗರವ ಹೊಗೆಯಲೆ ಶೌರ್ಯ ಗರ್ವದಲಿ
ವಾಣಿಯವನುಚಿತದಲಿ ಧರ್ಮದ
ಲೂಣೆಯವನಹಿತರಲುಪೇಕ್ಷೆಯ
ಕೇಣವನು ದಾನದಲಿ ಮಾಡೆಲೆ ರಾಯ ಕೇಳ್ ಎಂದ ॥44॥

೦೪೫ ಕಳವು ಪುಸಿ ...{Loading}...

ಕಳವು ಪುಸಿ ಹಾದರ ವಿರೋಧ
ಸ್ಖಲಿತವಾರಡಿಬಂದಿ ದಳವುಳ
ಬೆಳುಗವಿತೆಯನ್ಯಾಯ ಪರಿಭವ ಠಕ್ಕು ಡೊಳ್ಳಾಸ
ಪಳಿವು ವಂಚನೆ ಜಾತಿಸಂಕರ
ಕೊಲೆ ವಿರೋಧವು ವಿಕೃತ ಮಾಯಾ
ವಳಿಗಳೆಂಬಿವು ನಿನ್ನೊಳಿಲ್ಲಲೆ ರಾಯ ಕೇಳ್ ಎಂದ ॥45॥

೦೪೬ ರಣಮುಖದೊಳಙ್ಗನೆಯಲಾರೋ ...{Loading}...

ರಣಮುಖದೊಳಂಗನೆಯಲಾರೋ
ಗಣೆಯಲರಿಗಳ ಕೂಟದಲಿ ವಾ
ರಣ ತುರಗದೇರಾಟದಲಿ ವಿವಿಧಾಯುಧಂಗಳಲಿ
ಎಣೆ ನೃಪರ ಸೋಂಕಿನಲಿ ಸೆಜ್ಜೆಯ
ಲಣಿಯ ಮಜ್ಜನದಲಿ ಮಹಾಮೃಗ
ಗಣನೆಯೊಳಗೆಚ್ಚರಿಕೆಯುಂಟೇ ರಾಯ ನಿನಗೆಂದ ॥46॥

೦೪೭ ನುಡಿಗೆರಡನಾಡದಿರು ಕಾರ್ಯವ ...{Loading}...

ನುಡಿಗೆರಡನಾಡದಿರು ಕಾರ್ಯವ
ಬಿಡದಿರಾವನೊಳಾದರೆಯು ನಗೆ
ನುಡಿಯ ಕುಂದದಿರೊಡೆಯದಿರು ಹೃದಯವನು ಕಪಟದಲಿ
ಬಡ ಮನವ ಮಾಡದಿರು ಮಾರ್ಗದೊ
ಳಡಿಯಿಡದಿರನುಜಾತ್ಮಜರೊಳೊ
ಗ್ಗೊಡೆಯದಿರು ನೃಪನೀತಿಯಿದು ಭೂಪಾಲ ಕೇಳ್ ಎಂದ ॥47॥

೦೪೮ ನೀತಿವಿಡಿದರಸಙ್ಗೆ ಬಹಳ ...{Loading}...

ನೀತಿವಿಡಿದರಸಂಗೆ ಬಹಳ
ಖ್ಯಾತವದು ಜನರಾಗ ರಾಗ
ವ್ರಾತದಿಂ ಧನ ಧನದಿ ಪರಿಕರ ಪರಿಕರದಿ ಜಯವು
ಆತ ಜಯದಿಂ ಧರ್ಮ ಧರ್ಮ ಸ
ಮೇತದಿಂ ಸುರತುಷ್ಟಿ ತುಷ್ಟಿಯ
ನೀತಿಯಿಂದಿಹಪರವ ಗೆಲುವೈ ರಾಯ ನೀನೆಂದ ॥48॥

೦೪೯ ಮನ್ತ್ರವುಳ್ಳವನವನೆ ಹಿರಿಯನು ...{Loading}...

ಮಂತ್ರವುಳ್ಳವನವನೆ ಹಿರಿಯನು
ಮಂತ್ರವುಳ್ಳವನವನೆ ರಾಯನು
ಮಂತ್ರವುಳ್ಳವನವನೆ ಸಚಿವ ನಿಯೋಗಿಯೆನಿಸುವನು
ಮಂತ್ರವಿಲ್ಲದ ಬರಿಯ ಬಲು ತಳ
ತಂತ್ರದಲಿ ಫಲವಿಲ್ಲವೈ ಸ್ವಾ
ತಂತ್ರ್ಯವೆನಿಸಲ್ಕರಿವುದೇ ಭೂಪಾಲ ಕೇಳ್ ಎಂದ ॥49॥

೦೫೦ ಸತ್ಯವುಳ್ಳರೆ ಧರಣಿ ...{Loading}...

ಸತ್ಯವುಳ್ಳರೆ ಧರಣಿ ಸಾರುಗು
ಸತ್ಯವುಳ್ಳರೆ ಪದವಿ ಸಾರುಗು
ಸತ್ಯವುಳ್ಳರೆ ಸಕಲರಾಜ್ಯದ ವೀರಸಿರಿ ಸಾರ್ಗು
ಸತ್ಯವೇ ಬೇಹುದು ನೃಪರಿಗಾ
ಸತ್ಯ ಭುಜಬಲಗೂಡಿ ಮಂತ್ರದ
ಸತ್ಯವೇ ಸತ್ವಾಧಿಕವು ಭೂಪಾಲ ಕೇಳ್ ಎಂದ ॥50॥

೦೫೧ ಮೇಲನರಿಯದ ನೃಪನ ...{Loading}...

ಮೇಲನರಿಯದ ನೃಪನ ಬಾಳಿಕೆ
ಗಾಳಿಗೊಡ್ಡಿದ ಸೊಡರು ನೀರದ
ಜಾಲದೊಡ್ಡಣೆ ಸುರಧನುವಿನಾಕಾರ ಶವದುಡಿಗೆ
ಬಾಳಿಗೌಕಿದ ಕೊರಳು ಭುಜಗನ
ಹೇಳಿಗೆಯಲಿಕ್ಕಿದ ಕರವು ಬೆ
ಳ್ಳಾರ ಹಬ್ಬುಗೆಯವನ ಸಿರಿ ಭೂಪಾಲ ಕೇಳ್ ಎಂದ ॥51॥

೦೫೨ ಆಯವಿಲ್ಲದ ಬೀಯವನು ...{Loading}...

ಆಯವಿಲ್ಲದ ಬೀಯವನು ಪೂ
ರಾಯವಿಲ್ಲದ ಗಾಯವನು ನಿ
ರ್ದಾಯವಿಲ್ಲದ ಮಂತ್ರವನು ಲೇಸಾಗಿ ಮಿಗೆ ರಚಿಸಿ
ನ್ಯಾಯವಿಲ್ಲದ ನಡವಳಿಯನ
ನ್ಯಾಯ ಹೊದ್ದುವ ಪಾತಕವ ನಿಜ
ಕಾಯದಲಿ ನೀ ಧರಿಸೆಯೆಲೆ ಭೂಪಾಲ ಕೇಳ್ ಎಂದ ॥52॥

೦೫೩ ಫಲವಹುದ ಕೆಡಲೀಯದಳಿ ...{Loading}...

ಫಲವಹುದ ಕೆಡಲೀಯದಳಿ ಪರಿ
ಮಳವ ಕೊಂಬಂದದಲೆ ನೀನಾ
ಳ್ವಿಳೆಯ ಕರದರ್ಧವನ ತೆಗೆವೈ ಪ್ರಜೆಯ ನೋಯಿಸದೆ
ಹಲವು ಸನ್ಮಾನದಲಿ ನಯದಲಿ
ಚಲಿಸದಿಪ್ಪಂದದಲಿ ರಾಜ್ಯವ
ನಿಲಿಸುವಭಿಮತ ಮಂತ್ರಿಯುಂಟೇ ರಾಯ ನಿನಗೆಂದ ॥53॥

೦೫೪ ಸೂಕರನ ತುಮ್ಬಿಯ ...{Loading}...

ಸೂಕರನ ತುಂಬಿಯ ಮರಾಳನ
ಭೇಕವೈರಿಯ ಕಾರುಕನ ಕಪಿ
ಕೋಕಿಲನ ಬರ್ಹಿಯ ಸುಧಾಕಿರಣನ ದಿನಾಧಿಪನ
ಆಕಸದ ದರ್ಪಣದ ಬಕ ರ
ತ್ನಾಕರನದೊಂದೊಂದು ಗುಣವಿರ
ಬೇಕು ನೃಪರಿಗೆ ನಿನ್ನೊಳುಂಟೇ ರಾಯ ಹೇಳೆಂದ ॥54॥

೦೫೫ ನೆಚ್ಚದಿರು ಸಿರಿಯನು ...{Loading}...

ನೆಚ್ಚದಿರು ಸಿರಿಯನು ವೃಥಾ ಮದ
ಗಿಚ್ಚಿನುರಿಯಲಿ ಬೇಯದಿರು ಮಿಗೆ
ಬೆಚ್ಚಿ ಬೆದರದಿರೆಡರಿನಲಿ ಸತ್ಯವನು ಚಲಿಸದಿರು
ಮೆಚ್ಚದಿರಸತ್ಯವನು ಗುಣವನು
ಮುಚ್ಚದಿರು ಅಪಕೀರ್ತಿನಾರಿಯ
ಮೆಚ್ಚದಿರು ಮರುಳಾಗದಿರು ಭೂಪಾಲ ಕೇಳ್ ಎಂದ ॥55॥

೦೫೬ ಹಲವು ವಿನಿಯೋಗದಲಿ ...{Loading}...

ಹಲವು ವಿನಿಯೋಗದಲಿ ಸುದತಿಯ
ರೊಲುಮೆಯಲಿ ಸಕಲಾಂಗದಲಿ ನಿ
ಸ್ಖಲಿತ ನಿಜವನೆ ಧರಿಸುವಾಶ್ರಮ ವರ್ಣಭೇದದಲಿ
ಹಳಿವು ನಿನಗಾವಂಗದಲಿ ಬಳಿ
ಸಲಿಸದಲೆ ಪರತತ್ವದಲಿ ವೆ
ಗ್ಗಳಿಸದಲೆ ವೈರಾಗ್ಯಮತ ಭೂಪಾಲ ನಿನಗೆಂದ ॥56॥

೦೫೭ ಪರಿಜನಕೆ ದಯೆಯನು ...{Loading}...

ಪರಿಜನಕೆ ದಯೆಯನು ಪರಸ್ತ್ರೀ
ಯರಲಿ ಭೀತಿಯ ಹಗೆಗಳಲಿ ನಿ
ಷ್ಕರುಣತೆಯ ಬಡವರಲಿ ದಾನವ ದೈವ ಗುರು ದ್ವಿಜರ
ಚರಣ ಸೇವೆಯಲಾರ್ತತೆಯ ಪಿಸು
ಣರ ನುಡಿಗಳಲಿ ಮೂರ್ಖತೆಯ ನೀ
ವಿರಚಿಪೆಯೊ ಬೇಸರುವೆಯೋ ಭೂಪಾಲ ಕೇಳ್ ಎಂದ ॥57॥

೦೫೮ ಮೋಹದವಳಲಿ ವೈದ್ಯರಲಿ ...{Loading}...

ಮೋಹದವಳಲಿ ವೈದ್ಯರಲಿ ಮೈ
ಗಾಹಿನವರಲಿ ಬಾಣಸಿಗರಲಿ
ಬೇಹ ಮಂತ್ರಿಗಳಲಿ ವಿಧಾವಂತರಲಿ ಹಿರಿಯರಲಿ
ದೇಹರಕ್ಷಕರಲಿ ಸದೋದಕ
ವಾಹಿಯಲಿ ಹಡಪಾಳಿಯಲಿ ಪ್ರ
ತ್ಯೂಹವನು ವಿರಚಿಸೆಯಲೇ ಭೂಪಾಲ ಕೇಳ್ ಎಂದ ॥58॥

೦೫೯ ತರುಣಿಯಲಿ ಹಗೆಗಳಲಿ ...{Loading}...

ತರುಣಿಯಲಿ ಹಗೆಗಳಲಿ ಬಹಳೈ
ಶ್ವರಿಯದಲಿ ಶಸ್ತ್ರಾಂಗಿಯಲಿ ಸಂ
ಸ್ತರಣದಲಿ ಮದ್ಯಪನಲಬಲಾರ್ಥಿಯಲಿ ಶೃಂಗಿಯಲಿ
ಉರಗನಲಿ ನದಿಯಲಿ ನಖಿಯಲು
ಬ್ಬರದಲಿ ಶಿಖಿ ದುರ್ಮಂತ್ರಿಯಲಿ ದು
ಶ್ಚರಿತನಲಿ ವಿಶ್ವಾಸಿಸೆಯಲೇ ಭೂಪ ಕೇಳ್ ಎಂದ ॥59॥

೦೬೦ ಢಾಳರನು ಢವಳರನು ...{Loading}...

ಢಾಳರನು ಢವಳರನು ಠಕ್ಕಿನ
ಠೌಳಿಕಾರರ ಕೃತಕ ಮಾಯಾ
ಜಾಲರನು ಕಾಹುರರನಂತರ್ದಾಹಕರ ಶಠರ
ಖೂಳರನು ಖಳರನು ವಿಕಾರಿಯ
ಜಾಳು ನುಡಿಗಳ ಜಡಮತಿಯನೀ
ನಾಳಿಗೊಂಬೆಯೊ ಲಾಲಿಸುವೆಯೋ ರಾಯ ಹೇಳೆಂದ ॥60॥

೦೬೧ ಆವ ಕಾಲದೊಳಾವ ...{Loading}...

ಆವ ಕಾಲದೊಳಾವ ಕಾರ್ಯವ
ದಾವನಿಂದಹುದವನ ಮನ್ನಿಪ
ಠಾವಿದೆಂಬುದನರಿದಿಹೈ ಮೃಗಜೀವಿಯಂದದಲಿ
ಲಾವಕರ ನುಡಿ ಕೇಳಿ ನಡೆದರೆ
ಭೂವಳಯದೇಕಾಧಿಪತ್ಯದ
ಠಾವು ಕೆಡುವುದನರಿದಿಹೈ ಭೂಪಾಲ ಕೇಳ್ ಎಂದ ॥61॥

೦೬೨ ಅರಸು ರಾಕ್ಷಸ ...{Loading}...

ಅರಸು ರಾಕ್ಷಸ ಮಂತ್ರಿಯೆಂಬುವ
ಮೊರೆವ ಹುಲಿ ಪರಿವಾರ ಹದ್ದಿನ
ನೆರವಿ ಬಡವರ ಬಿನ್ನಪವನಿನ್ನಾರು ಕೇಳುವರು
ಉರಿವುರಿವುತಿದೆ ದೇಶ ನಾವಿ
ನ್ನಿರಲು ಬಾರದೆನುತ್ತ ಜನ ಬೇ
ಸರಿನ ಬೇಗೆಯಲಿರದಲೇ ಭೂಪಾಲ ಕೇಳ್ ಎಂದ ॥62॥

೦೬೩ ಧನದಲುರು ಧಾನ್ಯದಲಿ ...{Loading}...

ಧನದಲುರು ಧಾನ್ಯದಲಿ ನೆರೆದಿಂ
ಧನದಲುದಕದ ಹೆಚ್ಚುಗೆಯಲಂ
ಬಿನಲಿ ಶಸ್ತ್ರೌಘದಲಿ ಶಿಲ್ಪಿಗಳ ಶಿಲಾಳಿಯಲಿ
ವನವಳಯ ಕೋಟಾವಳಯ ಜೀ
ವನವಳಯ ಗಿರಿವಳಯ ದುರ್ಗಮ
ವೆನಿಪ ದುರ್ಗಾವಳಿ ಸಮಗ್ರವೆ ಭೂಪ ಕೇಳ್ ಎಂದ ॥63॥

೦೬೪ ಕೃಷಿ ಮೊದಲು ...{Loading}...

ಕೃಷಿ ಮೊದಲು ಸರ್ವಕ್ಕೆ ಕೃಷಿಯಿಂ
ಪಸರಿಸುವುದಾ ಕೃಷಿಯನುದ್ಯೋ
ಗಿಸುವ ಜನವನು ಪಾಲಿಸುವುದಾ ಜನಪದದ ಜನದಿ
ವಸು ತೆರಳುವುದು ವಸುವಿನಿಂ ಸಾ
ಧಿಸುವಡಾವುದಸಾಧ್ಯವದರಿಂ
ಕೃಷಿವಿಹೀನನ ದೇಶವದು ದುರ್ದೇಶ ಕೇಳ್ ಎಂದ ॥64॥

೦೬೫ ಸತಿಯರೊಲುಮೆಯ ವಿಟರುಗಳನಾ ...{Loading}...

ಸತಿಯರೊಲುಮೆಯ ವಿಟರುಗಳನಾ
ಸತಿಯರ ಸ್ಥಿತಿಗತಿಗೆ ತಾನೆಂ
ದತಿಶಯೋಕ್ತಿಯ ನುಡಿವವರನರಮನೆಯ ಕಾಹಿಂಗೆ
ಪತಿಕರಿಸಿದರೆ ಜಗವರಿಯಲಾ
ಕ್ಷಿತಿಪರಭಿಮಾನವು ಮುಹೂರ್ತಕೆ
ಗತವಹುದು ನೀನರಿದಿಹೈ ಭೂಪಾಲ ಕೇಳ್ ಎಂದ ॥65॥

೦೬೬ ಖಡುಗ ಧಾರೆಯ ...{Loading}...

ಖಡುಗ ಧಾರೆಯ ಮಧು ಮಹಾಹಿಯ
ಹೆಡೆಯ ಮಾಣಿಕ ವಜ್ರದಿಂ ಬಿಗಿ
ದೊಡಲಿಗೊಡ್ಡಿದ ಸುರಗಿ ಕಡುಗೆರಳಿದ ಮೃಗಾಧಿಪನ
ನಡು ಗುಹೆಯೊಳಿಹ ಸುಧೆಯ ಘಟವೀ
ಪೊಡವಿಯೊಡೆತನ ಸದರವೇ ಕಡು
ಬಡವರಿಗೆ ದೊರೆಕೊಂಬುದೇ ಭೂಪಾಲ ಕೇಳ್ ಎಂದ ॥66॥

೦೬೭ ಮಗಗೆ ಮುನಿವನು ...{Loading}...

ಮಗಗೆ ಮುನಿವನು ತಂದೆ ತಂದೆಗೆ
ಮಗ ಮುನಿವನೊಡಹುಟ್ಟಿದರು ಬಲು
ಪಗೆ ಕಣಾ ತಮ್ಮೊಳಗೆ ಭೂಪರ ಕುಲದ ವಿದ್ಯವಿದು
ಬಗೆಯೆ ನಿನ್ನೊಡಹುಟ್ಟಿದರು ಮಂ
ತ್ರಿಗಳೊಳಾಪ್ತರಖಿನ್ನರೇ ದಾ
ಯಿಗರೊಳಂತರ್ಬದ್ಧವುಂಟೇ ರಾಯ ನಿನಗೆಂದ ॥67॥

೦೬೮ ಮಲೆವ ರಾಯರ ...{Loading}...

ಮಲೆವ ರಾಯರ ಬೆನ್ನ ಕಪ್ಪವ
ನಲಗಿನಲಿ ಕೊಂಡಾಂತ ಮನ್ನೆಯ
ಕುಲದ ತಲೆ ಚೆಂಡಾಡಿ ಗಡಿಗಳ ದುರ್ಗದಲಿ ತನ್ನ
ಬಲು ಸಚಿವರನು ನಿಲ್ಲಿಸಿ ತಾ ಪುರ
ದಲಿ ವಿನೋದದಲಿರುತ ಹರುಷದ
ಲಿಳೆಯ ಪಾಲಿಸುವವನರಸು ಭೂಪಾಲ ಕೇಳ್ ಎಂದ ॥68॥

೦೬೯ ಮನ್ನಣೆಯೊಳಲ್ಪತೆಯ ನುಡಿಯೊಳ ...{Loading}...

ಮನ್ನಣೆಯೊಳಲ್ಪತೆಯ ನುಡಿಯೊಳ
ಗುನ್ನತಿಯನೆಸಗುವುದು ಪರರಿಗೆ
ತನ್ನವರಿಗುಗ್ಗಡದ ಪರಿಕರಣೆಯನು ಮಾತಿನಲಿ
ಭಿನ್ನವನು ತೋರುವುದು ರಾಯರ
ಗನ್ನಗತಕ ಕಣಾ ವಿಪುಳ ಸಂ
ಪನ್ನಮತಿ ನಿನಗುಂಟೆ ಭೂಮಿಪಾಲ ಕೇಳ್ ಎಂದ ॥69॥

೦೭೦ ಧನದಿ ಪಣ್ಡಿತರಶ್ವತತಿಯಾ ...{Loading}...

ಧನದಿ ಪಂಡಿತರಶ್ವತತಿಯಾ
ಧನದಿ ಧಾರುಣಿ ಮಾನ ಮೇಣಾ
ಧನದಿ ಕಾಂತೆಯರಖಿಳ ವಸ್ತುಗಳೈದೆ ಸೇರುವುದು
ನೆನಹು ತೃಪ್ತಿಯೊಳೈದದದರಿಂ
ಧನವೆ ಸಾಧನವರಸಿಗಾ ಧನ
ವನಿತು ದೊರಕೊಳಲಿದಿರದಾರೈ ಧಾತ್ರಿಪತಿಗಳಲಿ ॥70॥

೦೭೧ ಶೂರ ಧೀರನುದಾರ ...{Loading}...

ಶೂರ ಧೀರನುದಾರ ಧರ್ಮೋ
ದ್ಧಾರ ವಿವಿಧ ವಿಚಾರ ಸುಜನಾ
ಧಾರ ರಿಪುಸಂಹಾರ ಚತುರೋಪಾಯ ಸಾಕಾರ
ಸಾರಮಂತ್ರ ವಿಚಾರ ಭುವನಾ
ಧಾರ ಸುಜನಸ್ವಾಮಿ ಕಾರ್ಯಾ
ಗಾರನೆನಿಸುವ ಮಂತ್ರಿಯುಂಟೇ ರಾಯ ನಿನಗೆಂದ ॥71॥

೦೭೨ ತಿಳಿದವನ ಮತಿವಿದನ ...{Loading}...

ತಿಳಿದವನ ಮತಿವಿದನ ಭಾಷಾ
ವಳಿ ಲಿಪಿಜ್ಞನ ಸಾಕ್ಷರಿಕ ಮಂ
ಡಲಿಕ ಸಾವಂತರನಶೇಷರನಿಂಗಿತವನರಿತು
ಸಲೆ ಕರೆವ ಕಳುಹಿಸುವ ನಿಲಿಸುವ
ಬಲುಹನುಳ್ಳನ ಸುಕೃತ ದುಷ್ಕೃತ
ಫಲಿತ ಕಾರ್ಯಕೆ ಮಂತ್ರಿಯುಂಟೇ ರಾಯ ನಿನಗೆಂದ ॥72॥

೦೭೩ ಜರೆ ನರೆಯ ...{Loading}...

ಜರೆ ನರೆಯ ಮೈಸಿರಿಯ ಕುಲವೃ
ದ್ಧರನು ಹೀನಾಂಗರನು ಹಿಂಸಾ
ಚರಿತರನು ಜಾತ್ಯಂಧರನು ಧನದಾಸೆಯಳಿದವರ
ಅರಮನೆಯ ಸಂರಕ್ಷಣಾರ್ಥದೊ
ಳಿರಿಸಿದರೆ ಮಾನೋನ್ನತಿಕೆ ವಿ
ಸ್ತರಣವಹುದಿದನರಿದಿಹೈ ಭೂಪಾಲ ಕೇಳ್ ಎಂದ ॥73॥

೦೭೪ ಗುಳಿ ತೆವರನೀಕ್ಷಿಸುತ ...{Loading}...

ಗುಳಿ ತೆವರನೀಕ್ಷಿಸುತ ಬಟ್ಟೆಯ
ಮೆಳೆ ಮರಂಗಳ ಹೊಯ್ಲ ತಪ್ಪಿಸಿ
ನೆಳಲನರಸುತ ವೇಗಗತಿ ಸಾಮಾನ್ಯಗತಿಗಳಲಿ
ಬಳಿವಿಡಿದು ಭೂಭುಜರ ಯಾನಂ
ಗಳೊಳಗಳುಕದೆ ಢಗೆಯ ಸೈರಿಸಿ
ಬಳಸುವವನೇ ಛತ್ರಧಾರಕನರಸ ಕೇಳ್ ಎಂದ ॥74॥

೦೭೫ ಬೇಸರದೆ ಕಾಳೋರಗನನ ...{Loading}...

ಬೇಸರದೆ ಕಾಳೋರಗನನ
ಡ್ಡೈಸಿ ಕಟ್ಟಿರುವೆಗಳು ಮಿಗೆ ವೇ
ಡೈಸಿ ಕಡಿದರೆಯಟ್ಟುವಂದದಲಹಿತ ಬಲದೊಳಗೆ
ಓಸರಿಸದೊಳಹೊಕ್ಕು ಸಮರ ವಿ
ಳಾಸವನು ನೆರೆ ಮೆರೆದು ಕೇಶಾ
ಕೇಶಿಯಲಿ ಹಿಡಿದಿರಿವವನೆ ಕಾಲಾಳು ಕೇಳ್ ಎಂದ ॥75॥

೦೭೬ ಬಿಟ್ಟ ಸೂಠಿಯಲರಿನೃಪರ ...{Loading}...

ಬಿಟ್ಟ ಸೂಠಿಯಲರಿನೃಪರ ನೆರೆ
ಯಟ್ಟಿ ಮೂದಲಿಸುತ್ತ ಮುಂದಣ
ಥಟ್ಟನೊಡೆಹಾಯ್ದಹಿತ ಬಲದೊಳಗಾನೆವರಿವರಿದು
ಹಿಟ್ಟುಗುಟ್ಟುತ ಹೆಣನ ಸಾಲುಗ
ಳೊಟ್ಟು ಮೆರೆಯಲು ಕಳನ ಚೌಕದ
ಲಟ್ಟಿಯಾಡಿಸಬಲ್ಲವನೆ ರಾವುತನು ಕೇಳ್ ಎಂದ ॥76॥

೦೭೭ ಹೆಬ್ಬಲವನೊಡ ತುಳಿದು ...{Loading}...

ಹೆಬ್ಬಲವನೊಡ ತುಳಿದು ಧರಣಿಯ
ನಿಬ್ಬಗಿಯ ಮಾಡಿಸುತ ಪಾಯ್ದಳ
ದೊಬ್ಬುಳಿಯ ಹರೆಗಡಿದು ಕಾದಿಸುತಾನೆಗಳ ಮೇಲೆ
ಬೊಬ್ಬಿರಿದು ಶರ ಮಳೆಯ ಕರೆವುತ
ಲಬ್ಬರಿಸಿ ಬವರದಲಿ ರಿಪುಗಳಿ
ಗುಬ್ಬಸವನೆಸಗುವನೆ ಜೋಧನು ರಾಯ ಕೇಳ್ ಎಂದ ॥77॥

೦೭೮ ಒನ್ದು ಕಡೆಯಲಿ ...{Loading}...

ಒಂದು ಕಡೆಯಲಿ ದಳ ಮುರಿದು ಮ
ತ್ತೊಂದು ದಿಕ್ಕಲಿ ಮನ್ನೆಯರು ಕವಿ
ದೊಂದು ದೆಸೆಯಲಿ ಬಲದೊಳೊಂದನೆಯಧಿಕಬಲವೆನಿಸಿ
ಬಂದು ಸಂತಾಪದಲಿ ಕಾಳಗ
ದಿಂದ ಪುರದಲಿ ನಿಂದು ಕರಿಕರಿ
ಗುಂದುವ ಕ್ಷಿತಿಪಾಲನೇ ಭೂಪಾಲ ಕೇಳ್ ಎಂದ ॥78॥

೦೭೯ ಕುದುರೆಗಳನಾರೈದು ರಥವನು ...{Loading}...

ಕುದುರೆಗಳನಾರೈದು ರಥವನು
ಹದುಳಿಸುತ ಸಾರಥಿಯನೋವುತ
ಲಿದಿರ ಮುರಿವುತ ತನ್ನ ಕಾಯಿದುಕೊಳುತ ಕೆಲಬಲನ
ಸದೆದು ಮರಳುವ ಲಾಗು ವೇಗದ
ಕದನ ಕಾಲಾನಲನವನು ತಾ
ಮೊದಲಿಗನಲೈ ರಥಿಕರಿಗೆ ಭೂಪಾಲ ಕೇಳ್ ಎಂದ ॥79॥

೦೮೦ ದೊರೆಯ ಕಾಣುತ ...{Loading}...

ದೊರೆಯ ಕಾಣುತ ವಂದಿಸುತ್ತಂ
ಕರಿಸುತಂತರಿಸುತ್ತ ಮಿಗೆ ಹ
ತ್ತಿರನೆನಿಸದತಿ ದೂರನೆನಿಸದೆ ಮಧ್ಯಗತನೆನಿಸಿ
ಪರಿವಿಡಿಯಲೋಲೈಸುತರಸನ
ಸಿರಿ ಮೊಗವನೀಕ್ಷಿಸುತ ಬೆಸಸಲು
ಕರಯುಗವನಾನುವನೆ ಸೇವಕನರಸ ಕೇಳ್ ಎಂದ ॥80॥

೦೮೧ ನರಕ ಕರ್ಮವ ...{Loading}...

ನರಕ ಕರ್ಮವ ಮಾಡಿಯಿಹದೊಳು
ದುರಿತ ಭಾಜನರಾಗಿ ಕಡೆಯಲಿ
ಪರಕೆ ಬಾಹಿರರಾಗಿ ನಾನಾ ಯೋನಿಯಲಿ ಸುಳಿದು
ಹೊರಳುವರು ಕೆಲಕೆಲರು ಭೂಪರು
ಧರಿಸುವರಲೈ ರಾಜ ಧರ್ಮದ
ಹೊರಿಗೆಯನು ಮರೆದಿರೆಯಲಾ ಭೂಪಾಲ ಕೇಳ್ ಎಂದ ॥81॥

೦೮೨ ನೃಗನ ಭರತನ ...{Loading}...

ನೃಗನ ಭರತನ ದುಂದುಮಾರನ
ಸಗರನ ಪುರೂರನ ಯಯಾತಿಯ
ಮಗನ ನಹುಷನ ಕಾರ್ತವೀರ್ಯನ ನಳನ ದಶರಥನ
ಹಗಲಿರುಳು ವಲ್ಲಭರ ವಂಶದ
ವಿಗಡರಲಿ ಯಮಸೂನು ಸರಿಯೋ
ಮಿಗಿಲೊ ಎನಿಸುವ ನೀತಿಯುಂಟೇ ರಾಯ ನಿನಗೆಂದ ॥82॥

೦೮೩ ಆ ಮುನೀನ್ದ್ರನ ...{Loading}...

ಆ ಮುನೀಂದ್ರನ ವಚನ ರಚನಾ
ತಾಮರಸ ಮಕರಂದ ಕೇಳಿಯ
ಲೀ ಮಹೀಶಮನೋಮಧುವ್ರತವುಬ್ಬಿತೊಲವಿನಲಿ
ರೋಮ ಪುಳಕದ ರುಚಿರ ಭಾವ
ಪ್ರೇಮ ಪೂರಿತ ಹರುಷ ರಸದು
ದ್ದಾಮ ನದಿಯಲಿ ಮುಳುಗಿ ಮೂಡಿದನರಸ ಕೇಳ್ ಎಂದ ॥83॥

೦೮೪ ಎಲೆ ಮುನಿಯೆ ...{Loading}...

ಎಲೆ ಮುನಿಯೆ ನೀವ್ ರಚಿಸಿದೀ ನಿ
ರ್ಮಳ ನೃಪಾಲ ನಯ ಪ್ರಪಂಚವ
ಬಳಸಿದೆನು ಕೆಲ ಕೆಲವನಿನ್ನುರೆ ಬಳಸುವೆನು ಕೆಲವ
ಇಳಿದು ಧರಣಿಗೆ ಸುಳಿದು ನೀತಿ
ಸ್ಖಲಿತ ಜಡರನು ತಿದ್ದಿ ತಿಳುಹುವ
ಸುಲಭತನದಲಿ ದೇವಮುನಿ ನಿನಗಾರು ಸರಿಯೆಂದ ॥84॥

೦೮೫ ಮುನಿಯೆ ಬಿನ್ನಹವಿನ್ದು ...{Loading}...

ಮುನಿಯೆ ಬಿನ್ನಹವಿಂದು ನೀವಿಂ
ದ್ರನ ವಿರಿಂಚಿಯ ಯಮನ ವರುಣನ
ಧನಪತಿಯ ಶೇಷನ ಸಭಾಮಧ್ಯದಲಿ ಸುಳಿವಿರಲೆ
ಇನಿತು ರಚನೆಗೆ ಸರಿಯೊ ಮಿಗಿಲೋ
ಮನುಜ ಯೋಗ್ಯಸ್ಥಾನವೋ ಮೇ
ಣೆನಲು ನಗುತೆಂದನು ಮುನೀಶ್ವರನಾ ಯುಧಿಷ್ಠಿರಗೆ ॥85॥

೦೮೬ ಜನಪ ಕೇಳುತ್ಸೇದ ...{Loading}...

ಜನಪ ಕೇಳುತ್ಸೇದ ಶತ ಯೋ
ಜನ ತದರ್ಧದೊಳಗಲದಳತೆಯಿ
ದೆನಿಪುದಿಂದ್ರ ಸ್ಥಾನವಲ್ಲಿಹುದಖಿಳ ಸುರನಿಕರ
ಜನಪರಲ್ಲಿ ಯಯಾತಿಯಾತನ
ಜನಕ ನೃಗ ನಳ ಭರತ ಪೌರವ
ರೆನಿಪರಖಿಳ ಕ್ರತುಗಳಲಿ ಸಾಧಿಸಿದರಾ ಸಭೆಯ ॥86॥

೦೮೭ ವೈದಿಕೋಕ್ತಿಗಳಲಿ ಹರಿಶ್ಚಂ ...{Loading}...

ವೈದಿಕೋಕ್ತಿಗಳಲಿ ಹರಿಶ್ಚಂ
ದ್ರಾದಿರಾಯರು ರಾಜಸೂಯದೊ
ಳಾದರನಿಬರೊಳಗ್ಗಳೆಯರಿಂದ್ರಂಗೆ ಸರಿ ಮಿಗಿಲು
ಆದೊಡಾ ಪುರುಹೂತ ಸಭೆಯೋ
ಪಾದಿ ಯಮನಾಸ್ಥಾನವಲ್ಲಿ ವಿ
ಷಾದದಲಿ ನಿಮ್ಮಯ್ಯನಿಹನಾತನ ಸಮೀಪದಲಿ ॥87॥

೦೮೮ ವರುಣ ಸಭೆಯೊಳಗಿಹವು ...{Loading}...

ವರುಣ ಸಭೆಯೊಳಗಿಹವು ಭುಜಗೇ
ಶ್ವರ ಸಮುದ್ರ ನದೀನದಾವಳಿ
ಗಿರಿ ತರು ವ್ರಜವೆನಿಪ ಸಂಖ್ಯಾರಹಿತ ವಸ್ತುಗಳು
ಅರಸ ಕೇಳು ಕುಬೇರ ಸಭೆಯಾ
ಪರಿಯಗಲವೆಂಭತ್ತು ಯೋಜನ
ಹರಸಖನ ಸಿರಿ ಸದರವೇ ಭೂಪಾಲ ಕೇಳ್ ಎಂದ |88॥

೦೮೯ ಬಗೆಯೊಳಗೆ ಮೊಳೆವುದು ...{Loading}...

ಬಗೆಯೊಳಗೆ ಮೊಳೆವುದು ಚತುರ್ದಶ
ಜಗವೆನಲು ಜಾವಳವೆ ತಸ್ಯೋ
ಲಗದ ಸಿರಿ ಪರಮೇಷ್ಠಿಗೇನರಿದೈ ಮಹೀಪತಿಯೆ
ಸುಗಮಗಾನಿಯರುಪನಿಷದ ವಿ
ದ್ಯೆಗಳು ವೇದಕ್ರತು ಪುರಾಣಾ
ದಿಗಳು ಬಿದುದಾವಳಿಯ ಪಾಠಕರಾತನಿದಿರಿನಲಿ ॥89॥

೦೯೦ ಮುನಿಗಳೇ ಮಾಣಿಯರು ...{Loading}...

ಮುನಿಗಳೇ ಮಾಣಿಯರು ಮಂತ್ರಾಂ
ಗನೆಯರೋಲೆಯಕಾತಿಯರು ಸುರ
ಜನವೆ ಕಿಂಕರಜನವು ಸೂರ್ಯಾದಿಗಳೆ ಸಹಚರರು
ಘನ ಚತುರ್ದಶ ವಿದ್ಯೆ ಪಾಠಕ
ಜನವಲೈ ಪಾಡೇನು ಪದುಮಾ
ಸನನ ಪರುಠವವಾ ಸಭೆಗೆ ಸರಿ ಯಾವುದೈ ನೃಪತಿ ॥90॥

೦೯೧ ಇನಿಬರಾಸ್ಥಾನದಲಿ ಸುಕೃತಿಗ ...{Loading}...

ಇನಿಬರಾಸ್ಥಾನದಲಿ ಸುಕೃತಿಗ
ಳೆನಿಪ ತೇಜಸ್ವಿಗಳು ಗಡ ಸುರ
ಮುನಿ ಹರಿಶ್ಚಂದ್ರಂಗೆ ಸೇರಿದ ಸುಕೃತ ಫಲವೇನು
ಜನಪನಪದೆಸೆಗೇನು ದುಷ್ಕೃತ
ವೆನಲು ನಕ್ಕನು ರಾಜಸೂಯದ
ಘನವನರಿಯಾ ಧರ್ಮನಂದನಯೆಂದನಾ ಮುನಿಪ ॥91॥

೦೯೨ ಈ ಮಹಾಕ್ರತುವರವ ...{Loading}...

ಈ ಮಹಾಕ್ರತುವರವ ನೀ ಮಾ
ಡಾ ಮಹೀಶ್ವರ ಪಂಕ್ತಿಯಲ್ಲಿ ನಿ
ರಾಮಯನು ನಿಮ್ಮಯ್ಯನಿಹನು ಸತೇಜದಲಿ ಬಳಿಕ
ಸೋಮವಂಶದ ರಾಯರೊಳಗು
ದ್ದಾಮರಹ ಬಲುಗೈ ಕುಮಾರ
ಸ್ತೋಮ ನೀವಿರಲಯ್ಯಗೇನರಿದೆಂದನಾ ಮುನಿಪ ॥92॥

೦೯೩ ಮುನಿಯ ಮಾತಿನ ...{Loading}...

ಮುನಿಯ ಮಾತಿನ ಬಲೆಗೆ ಸಿಲುಕಿತು
ಜನಪತಿಯ ಚೈತನ್ಯಮೃಗವೀ
ತನ ವಚೋ ವರುಷದಲಿ ನೆನೆದವು ಕರಣವೃತ್ತಿಗಳು
ಮನದಲಂಕುರವಾಯ್ತು ನಾಲಿಗೆ
ಗೊನೆಯಲೆರಡೆಲೆಯಾಯ್ತು ಯಜ್ಞದ
ನೆನವು ಭಾರವಣೆಯಲಿ ಬಿದ್ದುದು ಧರ್ಮನಂದನನ ॥93॥

೦೯೪ ಕಳುಹಿದನು ಸುರಮುನಿಯನುದರದೊ ...{Loading}...

ಕಳುಹಿದನು ಸುರಮುನಿಯನುದರದೊ
ಳಿಳಿದುದಂತಸ್ತಾಪ ಯಜ್ಞದ
ಬಲುಹ ನೆನೆದಡಿಗಡಿಗೆ ಕಂಪಿಸಿ ಕೈಯ ಗಲ್ಲದಲಿ
ಒಲೆದೊಲೆದು ಭಾವದಲಿ ಮಿಗೆ ಕಳ
ವಳಿಸಿ ಪದುಳಿಸಿಕೊಳುತ ಭೂಪತಿ
ತಿಲಕ ಚಿಂತಿಸಿ ನೆನೆವುತಿದ್ದನು ವೀರ ನರಯಣನ ॥94॥

+೦೧ ...{Loading}...