೦೯

೦೦೦ ಸೂ ರಾಯ ...{Loading}...

ಸೂ. ರಾಯ ಕೌರವ ಸೈನ್ಯ ಕದಳೀ
ವಾಯುವುತ್ತರ ಸಹಿತ ನಿರ್ಜರ
ರಾಯ ನಂದನ ಬಂದು ಹೊಕ್ಕನು ಮತ್ಸ್ಯಪುರವರವ

೦೦೧ ಕೇಳು ಜನಮೇಜಯ ...{Loading}...

ಕೇಳು ಜನಮೇಜಯ ಧರಿತ್ರೀ
ಪಾಲ ಭಂಗದಲಖಿಳ ಕೌರವ
ಜಾಲ ತಿರುಗಿತು ದುಗುಡದಲಿ ಗಜಪುರಕೆ ನಡೆತಂದು
ಮೇಲು ಮುಸುಕಿನ ಮೊಗದ ವಾದ್ಯದ
ಮೇಳ ಮೋನದಲಖಿಳ ನೃಪರು ನಿ
ಜಾಲಯಂಗಳ ಬಂದು ಹೊಕ್ಕರು ಹೊತ್ತ ದುಗುಡದಲಿ ॥1॥

೦೦೨ ಬಳಿಕ ಫಲುಗುಣನತ್ತಲಾ ...{Loading}...

ಬಳಿಕ ಫಲುಗುಣನತ್ತಲಾ ಮರ
ದೊಳಗೆ ಕೈದುವನಿರಿಸಿ ಮುನ್ನಿನ
ಹುಲುರಥವ ಮೇಳೈಸಿ ಸಾರಥಿತನವನಳವಡಿಸೆ
ಇಳಿದು ಪಾರ್ಥನ ಮೈದಡವಿ ಕಪಿ
ಕುಲಲಲಾಮನು ವನಕೆ ಹಾಯ್ದನು
ಹೊಳಲ ಹೊರೆಯಲಿ ನಿಂದು ನಗುತುತ್ತರನೊಳಿಂತೆಂದ ॥2॥

೦೦೩ ಕರೆದು ದೂತರಿಗರುಹು ...{Loading}...

ಕರೆದು ದೂತರಿಗರುಹು ನೀನೇ
ಧುರವ ಜಯಿಸಿದೆನೆನ್ನು ನಾವಿ
ದ್ದಿರವನರುಹದಿರಿಂದು ಪಸರಿಸು ನಿನ್ನ ವಿಕ್ರಮವ
ಅರಸ ನಿನ್ನನೆ ಮನ್ನಿಸಲಿ ಪುರ
ಪರಿಜನಂಗಳು ನಿನ್ನ ವಿಜಯದ
ಹರುಷದಲಿ ಹೆಚ್ಚಿರಲಿ ನೇಮಿಸಿದಂತೆ ಮಾಡೆಂದ ॥3॥

೦೦೪ ಎನಲು ನೀನೇ ...{Loading}...

ಎನಲು ನೀನೇ ಬಲ್ಲೆ ಕರ ಲೇ
ಸೆನುತ ದೂತರ ಕರೆದು ಮತ್ಸ್ಯನ
ತನಯ ಕೌರವ ಬಲವ ಜಯಿಸಿದನೆಂದು ಪೇಳುವುದು
ಜನಕನಲ್ಲಿಗೆ ಪೋಗಿಯೆಂದಾ
ತನು ನಿಯಾಮಿಸುತಿರ್ದನತ್ತಲು
ಜನಪ ಕುಂತೀಸುತನು ಸಹಿತೈತಂದನರಮನೆಗೆ ॥4॥

೦೦೫ ಅರಮನೆಯ ಹೊಕ್ಕವನಿಪತಿಯು ...{Loading}...

ಅರಮನೆಯ ಹೊಕ್ಕವನಿಪತಿಯು
ತ್ತರನ ಕಾಣದೆ ಕಂದನೆತ್ತಲು
ಸರಿದನೆನೆ ರಾಣಿಯರು ಬಿನ್ನವಿಸಿದರು ಭೂಪತಿಗೆ
ಕುರು ಬಲವನಂಗೈಸೆ ಮಿಗೆಯು
ತ್ತರೆಯ ಗುರು ಸಾರಥಿತನವನನು
ಕರಿಸಿದನು ಕೆಲಬಲನ ಹಾರದೆ ಕದನಕೈದಿದನು ॥5॥

೦೦೬ ಎನ್ದರೊಡಲೊಳು ಕೂರಲಗು ...{Loading}...

ಎಂದರೊಡಲೊಳು ಕೂರಲಗು ಮುರಿ
ದಂದದಲಿ ಕಳವಳಿಸಿದನು ಮನ
ನೊಂದನಕಟ ಕುಮಾರನೆತ್ತಲು ರಾಯ ದಳವೆತ್ತ
ಬಂದವರು ಭೀಷ್ಮಾದಿಗಳು ತಾ
ನಿಂದು ತರಹರಿಸುವೊಡೆ ತಾನೇ
ನಿಂದುಧರನೇ ಮರುಳಲಾ ಮಗನೆನುತ ಚಿಂತಿಸಿದ ॥6॥

೦೦೭ ಮಗಗೆ ಪಡಿಬಲವಾಗಿ ...{Loading}...

ಮಗಗೆ ಪಡಿಬಲವಾಗಿ ಬಲು ಮಂ
ತ್ರಿಗಳನವನಿಪ ಬೀಳುಗೊಟ್ಟನು
ದುಗುಡದಿಂದಿರೆ ಹೊಳಲ ಕೈಸೂರೆಗಳ ಕಳಕಳದ
ಮೊಗದ ಹರುಷದಲಖಿಳ ದೂತಾ
ಳಿಗಳು ಬಂದುದು ಗುಡಿಯ ಕಟ್ಟಿಸು
ನಗರಿಯಲಿ ಕಳುಹಿದಿರುಗೊಳಿಸು ಕುಮಾರಕನನೆನುತ ॥7॥

೦೦೮ ರಾಯಕುವರ ಪಿತಾಮಹನು ...{Loading}...

ರಾಯಕುವರ ಪಿತಾಮಹನು ರಿಪು
ರಾಯ ಕುವರ ಕುಠಾರ ಕೌರವ
ರಾಯ ಥಟ್ಟು ವಿಭಾಡ ಕುರುಕುಲ ಗಜಕೆ ಪಂಚಾಸ್ಯ
ಜೀಯ ಬಿನ್ನಹ ಕರ್ಣ ಗುರು ಗಾಂ
ಗೇಯ ಮೊದಲಾದಖಿಳ ಕೌರವ
ರಾಯ ದಳವನು ಗೆಲಿದು ಉತ್ತರ ತುರುವ ಮರಳಿಚಿದ ॥8॥

೦೦೯ ಕೇಳಿ ಮಿಗೆ ...{Loading}...

ಕೇಳಿ ಮಿಗೆ ಹಿಗ್ಗಿದನು ತನು ಪುಳ
ಕಾಳಿ ತಳಿತುದು ಬಹಳ ಹರುಷದ
ದಾಳಿಯಲಿ ಮನ ಮುಂದುಗೆಟ್ಟುದು ಕಂಗಳರಳಿದವು
ಲಾಲಿಸುತ ಸರ್ವಾಂಗ ಹರುಷದೊ
ಳಾಳೆ ಜನಪ ಪಸಾಯಿತವ ದೂ
ತಾಳಿಗಿತ್ತನು ಸುಲಿದರವದಿರು ರಾಯನೋಲಗವ ॥9॥

೦೧೦ ಇದಿರುಗೊಳ ಹೇಳೆನಲು ...{Loading}...

ಇದಿರುಗೊಳ ಹೇಳೆನಲು ಸರ್ವಾಂ
ಗದಲಿ ಮಣಿ ಮೌಕ್ತಿಕದ ಸಿಂಗಾ
ರದ ಸುರೇಖೆಯ ಲಲಿತ ಚಿತ್ರಾವಳಿಯ ಮುಸುಕುಗಳ
ಸುದತಿಯರು ಹೊರವಂಟರೊಗ್ಗಿನ
ಮೃದು ಮೃದಂಗದ ಕಹಳೆಗಳು ಸಂ
ಪದದ ಸೊಂಪಿನಲೆಸೆಯೆ ರಾಜಾಂಗನೆಯರನುವಾಯ್ತು ॥10॥

೦೧೧ ಕವಿದು ನೂಕುವ ...{Loading}...

ಕವಿದು ನೂಕುವ ಹರುಷವನು ಸಂ
ತವಿಸಲರಿಯೆನು ಕಂಕ ನಿನ್ನೊಡ
ನೆವಗೆ ವಿಮಳ ದ್ಯೂತಕೇಳಿಗೆ ಚಿತ್ತವಾಯ್ತೆನಲು
ಅವನಿಪತಿ ಕೇಳ್ ಜೂಜಿನಲಿ ಪಾಂ
ಡವರು ಸಿಲುಕಿದರವರ ವಿಧಿಯನು
ಭುವನದಲಿ ಬಲ್ಲವರದಾರೆಂದನು ವಿರಾಟಂಗೆ ॥11॥

೦೧೨ ಅವರು ರಾಜ್ಯವನೊಡ್ಡಿ ...{Loading}...

ಅವರು ರಾಜ್ಯವನೊಡ್ಡಿ ಸೋತವೊ
ಲೆವಗೆ ಪಣ ಬೇರಿಲ್ಲ ಹರ್ಷೋ
ತ್ಸವ ಕುಮಾರಾಭ್ಯುದಯ ವಿಜಯಶ್ರವಣ ಸುಖ ಮಿಗಲು
ಎವಗೆ ಮನವಾಯ್ತೊಡ್ಡು ಸಾರಿಯ
ನಿವಹವನು ಹೂಡೆನಲು ಹೂಡಿದ
ನವನಿಪತಿ ನಸುನಗುತ ಹಾಸಂಗಿಯನು ಹಾಯ್ಕಿದನು ॥12|

೦೧೩ ಕೇಳಿ ಸಮತಳಿಸಿತ್ತು ...{Loading}...

ಕೇಳಿ ಸಮತಳಿಸಿತ್ತು ಮತ್ಸ್ಯ ನೃ
ಪಾಲನೆಂದನು ಕಂಕ ನೋಡೈ
ಕಾಳಗವನುತ್ತರನು ಗೆಲಿದನು ರಾಯ ಥಟ್ಟಿನಲಿ
ಶೂಲಪಾಣಿಗೆ ಸೆಡೆಯದಹಿತ ಭ
ಟಾಳಿ ಸೋತುದು ದಿವಿಜ ನರರೊಳು
ಹೋಲುವವರುಂಟೇ ಕುಮಾರನನೇನ ಹೇಳೆಂದ ॥13॥

೦೧೪ ಸೋತುದುಣ್ಟರಿ ಸೇನೆ ...{Loading}...

ಸೋತುದುಂಟರಿ ಸೇನೆ ಸುರಭಿ
ವ್ರಾತ ಮರಳಿದುದುಂಟು ಗೆಲವಿದು
ಕೌತುಕವಲೇ ಬಗೆಯಲದ್ಭುತವೆಮ್ಮ ಚಿತ್ತದಲಿ
ಮಾತು ಹೋಲುವೆಯಹುದು ಜಗ ವಿ
ಖ್ಯಾತ ಸಾರಥಿಯಿರೆ ಕುಮಾರಗೆ
ಭೀತಿ ಬಳಿಕೆಲ್ಲಿಯದು ತಪ್ಪೇನೆಂದನಾ ಕಂಕ ॥14॥

೦೧೫ ಎಲೆ ಮರುಳೆ ...{Loading}...

ಎಲೆ ಮರುಳೆ ಸನ್ಯಾಸಿ ಮತ್ಸರ
ದೊಳಗೆ ಮುಳುಗಿದ ಚಿತ್ತ ನಿನ್ನದು
ಗೆಲವಿನಲಿ ಸಂದೇಹವೇ ಹೇಳಾವುದದ್ಭುತವು
ಅಳುಕುವನೆ ಸುಕುಮಾರ ಸಾರಥಿ
ಬಲುಹನುಳ್ಳವನೇ ನಪುಂಸಕ
ನಲಿ ನಿರಂತರ ಪಕ್ಷವೆಯೆಂದು ವಿರಾಟ ಖತಿಗೊಂಡ ॥15॥

೦೧೬ ನಾರಿಯರ ಮೈಗುರುಹು ...{Loading}...

ನಾರಿಯರ ಮೈಗುರುಹು ಪುರುಷರ
ಚಾರು ಚಿಹ್ನವ ಕೂಡಿಕೊಂಡಿಹ
ಸಾರಥಿಯ ದೆಸೆಯಿಂದ ಕುವರನು ಗೆಲಿದನೆಂಬುದನು
ಸೈರಿಸಿದೆ ನಾನಿನ್ನೆವರ ಮ
ತ್ತಾರೊಡನೆ ಮಾತಾಡದಿರು ನಿ
ಸ್ಸಾರ ಹೃದಯನು ಕಂಕ ನೀ ದುಷ್ಟಾತ್ಮ ಹೋಗೆಂದ ॥16॥

೦೧೭ ಖತಿಯ ಹಿಡಿಯದಿರರಸ ...{Loading}...

ಖತಿಯ ಹಿಡಿಯದಿರರಸ ದಿಟ ನೀ
ನತಿಶಯವ ಬಯಸುವರೆ ಜನ ಸ
ಮ್ಮತವು ಸಾರಥಿ ಗೆಲಿದನೆಂದೇ ಹೊಯಿಸು ಡಂಗುರವ
ಸುತನು ಸಾರಥಿಯೆಂದು ಸಾರಿಸು
ವಿತಥವಲ್ಲಿದು ಪಕ್ಷಪಾತ
ಸ್ಥಿತಿಯನಾಡೆವು ಕವಲು ನಾಲಗೆಯಿಲ್ಲ ತನಗೆಂದ ॥17॥

೦೧೮ ನಿನ್ನ ಮೋಹದ ...{Loading}...

ನಿನ್ನ ಮೋಹದ ಕಂಗಳಿಗೆ ಮಗ
ನುನ್ನತೋನ್ನತ ಸತ್ವನೆಂದೇ
ಮುನ್ನ ತೋರಿತು ಹೊಲ್ಲೆಹವೆ ಸಂಸಾರಕ ಭ್ರಮೆಗೆ
ಇನ್ನು ಗೆಲಿದವನಾ ಬೃಹನ್ನಳೆ
ನಿನ್ನ ಮಗಗಳುಕುವರೆ ಭೀಷ್ಮನು
ಕರ್ಣ ಕೃಪ ಗುರು ಗುರುತನೂಭವರೆಂದನಾ ಕಂಕ ॥18॥

೦೧೯ ಎನಲು ಖತಿ ...{Loading}...

ಎನಲು ಖತಿ ಬಿಗುಹೇರಿ ಹಲು ಹಲು
ದಿನುತೆ ಕಂಗಳಲುರಿಯನುಗುಳುತ
ಕನಲಿ ಬಿಗಿದೌಡೊತ್ತಿ ಕನಕದ ಸಾರಿಯನು ನೆಗಹಿ
ಜನಪತಿಯ ಹಣೆಯೊಡೆಯಲಿಡೆ ಜಾ
ಜಿನ ಗಿರಿಯ ನಿರ್ಜರದವೊಲು ಭೋಂ
ಕೆನಲು ರುಧಿರದ ಧಾರೆ ಸಿಡಿದುದು ಶಿರದ ಸೆಲೆಯೊಡೆದು ॥19॥

೦೨೦ ಸೈರಿಸುತ ಕೈಯೊಡ್ಡಿ ...{Loading}...

ಸೈರಿಸುತ ಕೈಯೊಡ್ಡಿ ರಕುತದ
ಧಾರೆಯನು ಕೈತುಂಬ ಹಿಡಿದತಿ
ಧೀರನೋರೆಯ ನೋಟದಲಿ ಸೈರಂಧ್ರಿಯನು ಕರೆಯೆ
ನಾರಿ ಹರಿತಂದಕಟ ನೊಂದನು
ಕಾರುಣಿಕ ಸನ್ಯಾಸಿಯೆನುತ ವಿ
ಕಾರಿಸದೆ ಸೆರಗಿನಲಿ ತೋದಳು ಬಹಳ ಶೋಣಿತವ ॥20॥

೦೨೧ ಮಡದಿ ಕರಪಲ್ಲವದಲೊರೆಸಿದ ...{Loading}...

ಮಡದಿ ಕರಪಲ್ಲವದಲೊರೆಸಿದ
ಳಡಿಗಡಿಗೆ ಹಣೆಯನು ಕಪೋಲವ
ತೊಡೆದು ತೊಳೆದಳು ಮುಖವನದನವ ಕಂಡು ಬೆರಗಾಗಿ
ಹಿಡಿದೆ ರಕುತವನೇಕೆ ಕಾಮಿನಿ
ನುಡಿ ನಿಧಾನವನಿವರು ನೊಂದರೆ
ಮಿಡುಕಲೇತಕೆ ನೀನೆನುತ ದುರುಪದಿಯ ಬೆಸಗೊಂಡ ॥21॥

೦೨೨ ಉರಿದು ಹೋಹುದು ...{Loading}...

ಉರಿದು ಹೋಹುದು ನಿನ್ನ ರಾಜ್ಯದ
ಸಿರಿಯು ಬದುಕಿದೆಯೊಂದು ಕಣೆಯಕೆ
ಪರಮ ಯತಿ ಕಾಯಿದನು ಕೈಯಲಿ ತುಂಬಿ ಶೋಣಿತವ
ಅರಸ ಕೇಳೀ ಮುನಿಯ ನೆತ್ತರು
ಧರೆಯೊಳೊಕ್ಕೊಡೆಯಾ ಪ್ರದೇಶವ
ನೊರಸಿ ಕಳೆವುದು ದಿಟ ಬೃಹನ್ನಳೆಗೇರಿಸಿದ ಬಿರುದು ॥22॥

೦೨೩ ಈಕೆ ಯಾರಿವರಾರು ...{Loading}...

ಈಕೆ ಯಾರಿವರಾರು ನಾಟ್ಯ
ವ್ಯಾಕರಣ ಪಂಡಿತ ಬೃಹನ್ನಳೆ
ಯೀಕೆಗೇನಹನರಿಯ ಬಾರದು ಕಾಲು ಕೀಲುಗಳ
ಏಕೆ ನನಗದರರಿತವೆಂದವಿ
ವೇಕಿಯಿರೆ ಬಳಿಕಿತ್ತ ಪುರದಲಿ
ನೂಕು ನೂಕಾಯಿತ್ತು ನೋಡುವ ನೆರವಿಯುತ್ತರನ ॥23॥

೦೨೪ ಇದಿರು ಬನ್ದರು ...{Loading}...

ಇದಿರು ಬಂದರು ಮಂತ್ರಿಗಳು ವರ
ಸುದತಿಯರು ಸೂಸಿದರು ಸೇಸೆಯ
ನುದಿತ ಮಂಗಳ ಘೋಷ ವಾದ್ಯ ವಿತಾನ ರಭಸದಲಿ
ವದನವಿದೆ ಕಳೆಗುಂದಿ ಜಯದ
ಭ್ಯುದಯ ತಾನೆಂತೆನುತ ವರ ಕೋ
ವಿದರು ತಮ್ಮೊಳಗಾಡುತಿರ್ದರು ಕೂಡೆ ಗುಜುಗುಜಿಸಿ ॥24॥

೦೨೫ ಎನ್ದಿನವನುತ್ತರನು ಗಙ್ಗಾ ...{Loading}...

ಎಂದಿನವನುತ್ತರನು ಗಂಗಾ
ನಂದನನೀ ಹೂಹೆ ಗೆಲಿದನು
ಸಂದ ಸುಭಟ ದ್ರೋಣ ಕರ್ಣಾದಿಗಳನೋಡಿಸಿದ
ಎಂದು ಕೆಲಬರು ಕೆಲಬರಿವ ಗೆಲಿ
ದಂದವಾಗಿರದೀ ಬೃಹನ್ನಳೆ
ಯಿಂದ ಸಂಭಾವಿಸುವುದೆಂದುದು ಮಂದಿ ತಮತಮಗೆ ॥25॥

೦೨೬ ಲೀಲೆ ಮಿಗಲುತ್ತರನು ...{Loading}...

ಲೀಲೆ ಮಿಗಲುತ್ತರನು ಪುರಜನ
ಜಾಲ ಜೀಯೆನಲಿದಿರು ಬಂದ ನಿ
ವಾಳಿಗಳ ನೂಕಿದನು ಕೈವಾರಿಗಳ ಕೋಪಿಸುತ
ಆಲಿಯವನಿಯ ಬರೆಯೆ ಮುಸುಕಿನ
ಮೇಲು ದುಗುಡದ ಭಾರದಲಿ ರಾ
ಜಾಲಯಕೆ ಬರಲಿದಿರು ಬಂದಪ್ಪಿದನು ನಂದನನ ॥26॥

೦೨೭ ಬಾ ಮಗನೆ ...{Loading}...

ಬಾ ಮಗನೆ ವಸುಕುಲದ ನೃಪ ಚಿಂ
ತಾಮಣಿಯೆ ಕುರುರಾಯ ಮೋಹರ
ಧೂಮಕೇತುವೆ ಕಂದ ಬಾಯೆಂದಪ್ಪಿ ಕುಳ್ಳಿರಿಸೆ
ಕಾಮಿನಿಯರುಪ್ಪಾರತಿಗಳಭಿ
ರಾಮ ವಸ್ತ್ರ ನಿವಾಳಿ ರತ್ನ
ಸ್ತೋಮ ಬಣ್ಣದ ಸೊಡರು ಸುಳಿದವು ಹರುಷದೊಗ್ಗಿನಲಿ ॥27॥

೦೨೮ ಬೊಪ್ಪ ಸಾಕೀ ...{Loading}...

ಬೊಪ್ಪ ಸಾಕೀ ಬಯಲ ಡೊಂಬೆನ
ಗೊಪ್ಪುವುದೆ ವೀರೋಪಚಾರವಿ
ದೊಪ್ಪುವರಿಗೊಪ್ಪುವುದು ತೆಗೆಸೆನಲರಸ ನಸುನಗುತ
ದರ್ಪವುಳ್ಳಂಗೀಸು ಮಂಗಳ
ವೊಪ್ಪದೇನೈ ಜಗದೊಳಾವಂ
ಗಪ್ಪುದೀ ಬಲವೀ ನಿಗರ್ವಿತೆಯೆಂದನಾ ಮತ್ಸ್ಯ ॥28॥

೦೨೯ ಮಗನೆ ಕರ್ಣ ...{Loading}...

ಮಗನೆ ಕರ್ಣ ದ್ರೋಣ ಭೀಷ್ಮಾ
ದಿಗಳನೊಬ್ಬನೆ ಗೆಲಿದೆಯೀ ಕಾ
ಳಗದ ಕಡುಗಲಿತನಗಳುಂಟೇ ಪೂರ್ವ ಪುರುಷರಲಿ
ದುಗುಡವೇಕೆನ್ನಾಣೆ ಹೆತ್ತರ
ಮೊಗಕೆ ಹರುಷವ ತಂದೆಲಾ ಹಂ
ಗಿಗನೆ ತಲೆಗುತ್ತಲೇಕೆಂದೆತ್ತಿನು ಮುಖವ ॥29॥

೦೩೦ ಕಾದಿ ಗೆಲಿದವ ...{Loading}...

ಕಾದಿ ಗೆಲಿದವ ಬೇರೆ ಸಾರಥಿ
ಯಾದ ತನಗೀಸೇಕೆ ನಿಮ್ಮಡಿ
ಯಾದರಿಸಲೊಡೆಮುರಿಚ ಬಲ್ಲೆನೆ ನಾಚಿಸದಿರೆನಲು
ಕಾದಿದಾತನು ನೀನು ಸಾರಥಿ
ಯಾದವನು ತಂಗಿಯ ಬೃಹನ್ನಳೆ
ವಾದ ಬೇಡಲೆ ಮಗನೆ ಬಲ್ಲೆನು ನಿನ್ನ ವಿಕ್ರಮವ ॥30॥

೦೩೧ ಅದಟುತನವೆನಗುಣ್ಟೆ ಬೆನ್ದುದ ...{Loading}...

ಅದಟುತನವೆನಗುಂಟೆ ಬೆಂದುದ
ಬೆದಕಿ ನೋಯಿಸಬೇಡ ಹಗಲಿನ
ಕದನವನು ಗೆಲಿದಾತ ಬೇರಿಹ ಬೊಪ್ಪ ನುಡಿಯದಿರು
ಉದಯದಲಿ ಗೆಲಿದಾತನನು ನಿ
ಮ್ಮಿದಿರಿನಲಿ ತೋರುವೆನು ಬೀಳ್ಕೊಡಿ
ಸದನಕೆಂದು ಕುಮಾರ ಕಳುಹಿಸಿಕೊಂಡನರಮನೆಗೆ ॥31॥

೦೩೨ ಇತ್ತಲರ್ಜುನ ದೇವ ...{Loading}...

ಇತ್ತಲರ್ಜುನ ದೇವ ಸಾರಿದ
ನುತ್ತರೆಯ ಭವನವನು ತಾ ತಂ
ದುತ್ತಮಾಂಬರ ವಿವಿಧ ರತ್ನಾಭರಣ ವಸ್ತುಗಳ
ಇತ್ತನಾ ಕನ್ನಿಕೆಗೆ ಮುದ ಮಿಗ
ಲುತ್ತರೆಯ ಮನೆಯಿಂದ ಶಶಿಕುಲ
ಮತ್ತವಾರಣ ಬಂದನಾ ಭೀಮಾಗ್ರಜನ ಹೊರೆಗೆ ॥32॥

೦೩೩ ಬಳಿಕ ಸಙ್ಕೇತದಲಿ ...{Loading}...

ಬಳಿಕ ಸಂಕೇತದಲಿ ಭೂಪನ
ನಿಳಯವನು ಕಲಿಭೀಮ ಹೊಕ್ಕನು
ನಳಿನಮುಖಿ ಸಹದೇವ ನಕುಲರು ಬಂದರಾ ಕ್ಷಣಕೆ
ಫಲುಗುಣನು ಹೊಡವಂಟನಿಬ್ಬರಿ
ಗುಳಿದವರು ಪಾರ್ಥಂಗೆ ವಂದಿಸ
ಲೊಲಿದು ಬಿಗಿಯಪ್ಪಿದನು ಪರಿತೋಷದಲಿ ಸಮಬಲರ ॥33॥

೦೩೪ ಉಳಿದ ನಾಲ್ವರು ...{Loading}...

ಉಳಿದ ನಾಲ್ವರು ಕಲಿ ತ್ರಿಗರ್ತರ
ಗೆಲಿದ ಪರಿಯನು ಪಾರ್ಥ ಕೌರವ
ಬಲವ ಭಂಗಕೆ ತಂದ ಪರಿಯನು ಹೇಳುತಿರುತಿರಲು
ನಿಲುಕಿ ರಾಯನ ಹಣೆಯ ಗಾಯವ
ಬಳಿಕ ಕಂಡನಿದೇನು ನೊಸಲಿಂ
ದಿಳಿವುತಿದೆ ನಸು ರಕ್ತಬಿಂದುಗಳೆಂದನಾ ಪಾರ್ಥ ॥34॥

೦೩೫ ಅನವಧಾನದೊಳಾಯ್ತು ಸಾಕದ ...{Loading}...

ಅನವಧಾನದೊಳಾಯ್ತು ಸಾಕದ
ನೆನೆಯಲೇತಕೆ ಮಾಣೆನಲು ಮಿಗೆ
ಕನಲುತರ್ಜುನನರಿದನಾ ದ್ರೌಪದಿಯ ಸೂರುಳಿಸಿ
ಮನದಲುರಿದೆದ್ದನು ವಿರಾಟನ
ತನುವ ಹೊಳ್ಳಿಸಿ ರಕುತವನು ಶಾ
ಕಿನಿಯರಿಗೆ ಹೊಯಿಸುವೆನು ಹೊಲ್ಲೆಹವೇನು ಹೇಳೆಂದ ॥35॥

೦೩೬ ಕಳುಹಬೇಕೇ ಕೀಚಕೇನ್ದ್ರನ ...{Loading}...

ಕಳುಹಬೇಕೇ ಕೀಚಕೇಂದ್ರನ
ಬಳಗವಿದ್ದಲ್ಲಿಗೆ ವಿರಾಟನ
ತಲೆಯ ಋಣ ಸಾಲಿಗನಲೇ ಶಿವ ಶಿವ ಮಹಾದೇವ
ನೆಲದೊಳೊಕ್ಕುದೆ ರಕ್ತವವದಿರ
ಕುಲವ ಸವರುವೆನಿವನ ಸೀಳಿದು
ಬಲಿಯ ಕೊಡುವೆನು ಭೂತಗಣಕೆನುತೆದ್ದನಾ ಭೀಮ ॥36॥

೦೩೭ ಕಾಕ ಬಳಸಲು ...{Loading}...

ಕಾಕ ಬಳಸಲು ಬೇಡ ಹೋ ಹೋ
ಸಾಕು ಸಾಕೈ ತಮ್ಮ ಮಾಣು
ದ್ರೇಕವನು ನೆಲ ರಕ್ತ ಕಂಡರೆ ನನ್ನ ಮೇಲಾಣೆ
ಈ ಕಮಲಲೋಚನೆಯ ಸೆರಗಿಗೆ
ಸೇಕವಾಯಿತು ರಕುತವತಿ ಸ
ವ್ಯಾಕುಲತೆ ಬೇಡೆಂದು ಗಲ್ಲವ ಹಿಡಿದನನಿಲಜನ ॥37॥

೦೩೮ ಕೊಮ್ಬೆನಾತನ ಜೀವವನು ...{Loading}...

ಕೊಂಬೆನಾತನ ಜೀವವನು ಪತಿ
ಯೆಂಬ ಗರ್ವವನವನ ನೆತ್ತಿಯ
ತುಂಬಿ ಬಿಡಲೆರಗುವೆನು ತರಿವೆನು ಮತ್ಸ್ಯಸಂತತಿಯ
ಅಂಬುಜಾಕ್ಷಿಯ ಕೀಚಕನ ಬೇ
ಳಂಬವೀತನ ಕೂಟ ಭೂತ ಕ
ದಂಬ ತುಷ್ಟಿಯ ಮಾಡಬೇಹುದು ಸೆರಗ ಬಿಡಿಯೆಂದ ॥38॥

೦೩೯ ಇವನ ನಾವೋಲೈಸಿ ...{Loading}...

ಇವನ ನಾವೋಲೈಸಿ ಕೈಯೊಡ
ನಿವಗೆ ಮುನಿದೊಡೆಯೇನನೆಂಬುದು
ಭುವನ ಜನವುಭ್ರಮಿಸದಿರು ಸೈರಣೆಗೆ ಮನ ಮಾಡು
ಎವಗೆ ನೋವಿನ ಹೊತ್ತು ದುಷ್ಕೃತ
ವಿವರಣದ ಫಲವಿದಕೆ ಲೋಗರ
ನವಗಡಿಸಿದೊಡೆ ಹಾನಿಯೆಮಗೆನೆ ಭೀಮನಿಂತೆಂದ ॥39॥

೦೪೦ ಬರಿಯ ಧರ್ಮದ ...{Loading}...

ಬರಿಯ ಧರ್ಮದ ಜಾಡ್ಯದಲಿ ಮೈ
ಮರೆದು ವನದಲಿ ಬೇರು ಬಿಕ್ಕೆಯ
ನರಸಿ ತೊಳಲಿದು ಸಾಲದೇ ಹದಿಮೂರು ವತ್ಸರದಿ
ಉರುಕುಗೊಂಡೊಡೆ ರಾಜ ತೇಜವ
ಮೆರೆವ ದಿನವೆಂದಿಹುದು ನೀವಿ
ನ್ನರಿಯಿರೆಮ್ಮನು ಹರಿಯ ಬಿಡಿ ಸಾಕೆಂದನಾ ಭೀಮ ॥40॥

೦೪೧ ಉದಯದಲಿ ನಾವಿನಿಬರಾತನ ...{Loading}...

ಉದಯದಲಿ ನಾವಿನಿಬರಾತನ
ಸದನದಲಿ ನೃಪಪೀಠವನು ಗ
ರ್ವದಲಿ ನೆಮ್ಮುವೆವಾತ ನಮ್ಮಲಿ ಖೋಡಿಯನು ಹಿಡಿಯೆ
ಮದಮುಖನನೊರಸುವೆವು ಹರುಷದ
ಲಿದಿರುಗೊಂಡೊಡೆ ಮನ್ನಿಸುವ ಮಾ
ತಿದುವೆ ಸನ್ಮತವೆಂದು ಸಂತೈಸಿದನು ಪವನಜನ ॥41॥

+೦೯ ...{Loading}...